ಚಿಕ್ಕಮಗಳೂರು: ಚಿಕ್ಕಮಗಳೂರು ಅಂದರೆ ಪ್ರವಾಸಿಗರಿಗೆ ಹೇಳಿ ಮಾಡಿಸಿದ ಜಾಗ, ಹೀಗಾಗಿ ಲಕ್ಷಾಂತರ ಜನರು ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಆದರೀಗ ಜಿಲ್ಲೆಯಲ್ಲಾಗುತ್ತಿರುವ ಮಹಾಮಳೆಗೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಆದರೂ ಪ್ರವಾಸಿಗರು ಇದನ್ನು ಲೆಕ್ಕಿಸದೇ ನೀರಿನ ಜೊತೆ ಸೆಲ್ಫಿ, ರೀಲ್ಸ್ ಹುಚ್ಚಾಟ ಮಾಡುತ್ತಿರುವುದು ಕಂಡುಬರುತ್ತಿದೆ. ಇದು ಕಾಫಿನಾಡು ಚಿಕ್ಕಮಗಳೂರಿನ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇದರ ಜತೆಗೆ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ರಸ್ತೆ ತೆರವು ಕಾರ್ಯ ಹಿನ್ನೆಲೆ ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ ನೀಡಿದ್ದಾರೆ. ಇದೀಗ ಜುಲೈ 31ರವರೆಗೆ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ.