ಚಿಕ್ಕಮಗಳೂರು: ಚುನಾವಣೆಯಲ್ಲಿ ಸೋಲಿನ ಭಯದಿಂದ ಶಾಸಕ ಸಿ.ಟಿ.ರವಿಯವರು ಮತದಾರರಿಗೆ ಹಣ, ಹೆಂಡ, ಸೀರೆ ಹಂಚುತ್ತಿದ್ದಾರೆ ಎಂಬ ಕಾಂಗ್ರೆಸ್ ಮುಖಂಡ ಹೆಚ್.ಡಿ.ತಮ್ಮಯ್ಯ ಅವರ ಆರೋಪ ಕೇವಲ ರಾಜಕೀಯ ಪ್ರೇರಿತವಾಗಿದೆ ಎಂದು ವರಸಿದ್ದಿ ವೇಣುಗೋಪಾಲ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಶಾಸಕ ಸಿ.ಟಿ.ರವಿಯವರು ಚುನಾವಣೆ ಗೆಲ್ಲಲು ಹಣ, ಹೆಂಡ ಹಾಗೂ ಸೀರೆ ಹಂಚುವ ಅಗತ್ಯವಿಲ್ಲ.
ತಮ್ಮ ಅಧಿಕಾರದ ಅವಧಿಯಲ್ಲಿ ೫೩೦೦ ಕೋಟಿ ರೂಗಳು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಕ್ಷೇತ್ರದಲ್ಲಿ ಕಳೆದ ಎರಡು ದಶಕಗಳಲ್ಲಿ ಉತ್ತಮ ಕೆಲಸ ಮಾಡಿದ್ದು ಮತದಾರರಿಗೆ ಗೊತ್ತಿದೆ. ಅದನ್ನು ತಮ್ಮಯ್ಯ ಹೇಳುವ ಅಗತ್ಯವಿಲ್ಲ. ಮುಂಬರುವ ಚುನಾವಣೆಯಲ್ಲಿ ಮತದಾರರು ಸಿ.ಟಿ.ರವಿ ಪರ ಮತದಾನ ಮಾಡುವ ಮೂಲಕ ಜನರೇ ಇದನ್ನು ಸಾಬೀತು ಮಾಡಲಿದ್ದಾರೆ ಎಂದರು.
ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿದ ಶಾಸಕ ಸಿ.ಟಿ.ರವಿಯವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾಮಗಾರಿಗಳಿಗೆ ಆದ್ಯತೆ ನೀಡಿದ್ದು, ರಾಜ್ಯದಲ್ಲೇ ಈ ಕ್ಷೇತ್ರ ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ, ಜವಳಿ ಪಾರ್ಕ್, ಹಾಲಿನ ಡೈರಿ ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಸಮಸ್ಯೆ ಗಳಿಗೆ ನೆರವಾಗಿರುವುದು ಸೇರಿದಂತೆ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರುಗಳಾದ ಮಧುಕುಮಾರ್ ರಾಜ್ ಅರಸ್, ಅಮೃತೇಶ್, ಅರುಣ್ ಕುಮಾರ್, ಕವಿತಾ ಶೇಖರ್ ಉಪಸ್ಥಿತರಿದ್ದರು.