ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟದಮನೆ ಗ್ರಾಮದಲ್ಲಿ ಹರಿಯುತ್ತಿರುವ ಹೇಮಾವತಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ನೂತನ ಸೇತುವೆ ಕಾಮಗಾರಿಯ ವಿಳಂಬ ಧೋರಣೆ ಖಂಡಿಸಿ ಕಿರುಗುಂದ ಮತ್ತು ಹಂತೂರು ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರು ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಿದರು. ಬೆಟ್ಟದ ಮನೆ ಹೇಮಾವತಿ ನದಿ ಮೇಲ್ಬಾಗದಲ್ಲಿ ಇರುವ ಸೇತುವೆ ಶತಮಾನಗಳ ಹಳೆಯದಾಗಿದ್ದು ಶಿಥಿಲಾವಸ್ಥೆಗೆ ತಲುಪಿದೆ.
ಸರ್ಕಾರ ಸೇತುವೆ ಶಿಥಿಲವಾಗಿದೆ ಎಂದು ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು. ಈ ಸೇತುವೆ ಕಾಮಗಾರಿ ಯ ಗುತ್ತಿಗೆದಾರ ೨೦೧೮ರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಿದರೂ ಇದುವರೆಗೂ ಪೂರ್ಣಗೊಳಿಸಿಲ್ಲ. ಆಮೆನಡಿಗೆಯ ಕಾಮಗಾರಿ ನಡೆಸಿ ೫ವರ್ಷ ಕಳೆದರೂ ಸೇತುವೆ ನಿರ್ಮಾಣ ಸಂಪೂರ್ಣವಾಗಿಲ್ಲ. ಈ ವರ್ಷದ ಜನವರಿಯಲ್ಲಿ ಕಾಮಗಾರಿ ಸ್ಥಗಿತಗೊಳಿಸಿ ತೆರಳಿರುವ ಗುತ್ತಿಗೆದಾರ ಇದುವರೆಗೂ ಪತ್ತೆ ಇಲ್ಲ ಇದರಿಂದ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದರು.
ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಇದೀಗ ಹಳೆಯ ಸೇತುವೆಯೂ ಗುಂಡಿಬಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ. ಆದ್ದರಿಂದ ನೂತನ ಸೇತುವೆಯ ಕಾಮಗಾರಿಯನ್ನು ಕೂಡಲೆ ಆರಂಭಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಬೆಟ್ಟದಮನೆ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಸ್ಥಳದಲ್ಲಿ ಸುಮಾರು ೧ಗಂಟೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಮುಂದಿನ ೧೦ ದಿನದಲ್ಲಿ ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಮತ್ತು ಮುಂಬರುವ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಪ್ರತಿಭಟನಾ ನಿರತ ಸ್ಥಳಕ್ಕೆ ಆಗಮಿಸಿದ ಕಿರುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಿ.ಡಿ.ಓ. ಅವರ ಮುಖಾಂತರ ಸರ್ಕಾರಕ್ಕೆ ತಮ್ಮ ಪ್ರತಿಭಟನಾ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರು, ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.