ಚಿಕ್ಕಮಗಳೂರು: ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ಕೇಂದ್ರ ಸರಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ.
ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ 5 ಕೆಜಿ ಉಚಿತ ಅಕ್ಕಿ ನಿರಂತರವಾಗಿ ಕೇಂದ್ರ ನೀಡುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ.
ಈಗ ರಾಜ್ಯಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ. ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ.
ಅತಿ ಮುಖ್ಯ ವಿಚಾರವೆಂದರೆ, ಸಿದ್ದರಾಮಯ್ಯನವರೆ ನೀವು ಕೊಡಲು ನೀಡಿರುವ ಹತ್ತು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ. ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.