ಚಿಕ್ಕಮಗಳೂರು: ಮೂಲ ಸೌಕರ್ಯಗಳನ್ನು ಕಲ್ಪಿಸಿ ಅಭಿವೃದ್ಧಿಪಡಿಸದೆ ತರಾತುರಿಯಲ್ಲಿ ವಾಜಪೇಯಿ ಬಡಾವಣೆಯಲ್ಲಿರುವ ೫೦ ಮೂಲೆ ನಿವೇಶನಗಳನ್ನು ಕಡಿಮೆ ದರಕ್ಕೆ ಹರಾಜು ಮಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿರು ಹರಾಜು ರದ್ದುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಪರವಾಗಿ ಮನು ಸ್ವೀಕರಿಸಿದರು.
ನಗರದ ಹೊರ ವಲಯದ ಇಂದಾವರ ಗ್ರಾಮದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಹೊಸದಾಗಿ ವಾಜಪೇಯಿ ಬಡಾವಣೆ ರಚನೆಯಾಗಿದೆ. ಆದರೆ, ಈ ಬಡಾವಣೆಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಉದ್ಯಾನವನ ಸೇರಿದಂತೆ ಯಾವುದೇ ಮೂಲ ಭೂತ ಸೌಕ ರ್ಯಗಳನ್ನು ಕಲ್ಪಿಸಿರುವುದಿಲ್ಲ. ಯಾವುದೇ ನಿವೇಶನಗಳನ್ನು ಹರಾಜು ಮಾಡುವ ಮೊದಲು ಮೂಲ ಸೌಕರ್ಯಗಳನ್ನು ನೀಡಬೇಕು ಎಂಬ ಸರ್ಕಾರದ ನಿಯಮಕ್ಕೆ ವಿರುದ್ಧವಾಗಿ ಹರಾಜು ನಡೆಸಲು ನಗರಾಭಿವೃದ್ಧಿ ಪ್ರಾಧಿಕಾರ ತರಾತುರಿಯಲ್ಲಿ ದಿನಾಂಕ ನಿಗಧಿಸಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮೂಲ ಸೌಕರ್ಯಗಳನ್ನು ಕಲ್ಪಿಸುವ ಮೊದಲೆ ೫೦ ಮೂಲೆ ನಿವೇಶನಗಳನ್ನು ಹರಾಜಿಗೆ ಇಡುವುದರಿಂದ ಜನರು ಕಡಿಮೆ ದರಕ್ಕೆ ಹರಾಜು ಕೂಗುವುದರಿಂದ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಸರ್ಕಾರಕ್ಕೆ ದೊಡ್ಡ ನಷ್ಟ ಉಂಟಾಗಲಿದೆ. ಜೊತೆಗೆ ತರಾತುರಿಯಲ್ಲಿ ಹರಾಜು ಮಾಡಲು ಹೊರಟಿರುವುದು ಹಲ ವಾರು ಸಂಶಯಗಳಿಗೆ ಕಾರಣವಾಗಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.
ಮೂಲೆ ನಿವೇಶನಗಳನ್ನು ಹರಾಜು ಮಾಡಲು ಉದ್ದೇಶಿಸಿರುವುದನ್ನು ರದ್ದುಗೊಳಿಸುವ ಮೂಲಕ ಸರ್ಕಾರದ ಖಜಾನೆಗೆ ಆಗಲಿರುವ ನಷ್ಟವನ್ನು ತಪ್ಪಿಸುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸೈಯಾದ್ ಹನೀಫ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮನವಿ ಸಲ್ಲಿಸಿದರು.