ಚಿಕ್ಕಮಗಳೂರು: ರಾಜ್ಯ ವಿಧಾನಸಭೆ ಚುನವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಪರ ಪ್ರಚಾರ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂಡಿಗೆರೆಗೆ ಆಗಮಿಸಿದ್ದು, ಈ ವೇಳೆ ಚುನಾವಣಾ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ತಪಾಸಣೆ ನಡೆಸಿದರು.
ಹೊನ್ನಾಳಿ, ಚನ್ನಗಿರಿ ಪ್ರವಾಸ ಮುಗಿಸಿ ನಂತರ ಪ್ರಚಾರ ಮಾಡಲು ಮೂಡಿಗೆರೆಗೆ ಆಗಮಿಸದ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣೆ ಅಧಿಕಾರಿಗಳು ತಪಾಸಣೆ ನಡೆಸಿದರು.
ಮೂಡಿಗೆರೆ ಪಟ್ಟಣದ ಹೊಯ್ಸಳ ಕ್ರಿಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದರು. ಅಲ್ಲದೆ ಈ ಸಮಾವೇಶದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಮೋದಿ ವಿರುದ್ಧ ಹರಿಹಾಯ್ದ ಡಿ.ಕೆ.ಶಿ: ಇನ್ನು ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲು ಅನುಭವಿಸಲಿದೆ ಎಂದು ಅರಿತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತಾಶರಾಗಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇತ್ತೀಚೆಗಷ್ಟೇ ತಿರುಗೇಟು ನೀಡಿದ್ದರು.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳಿಗೆ ಬಿಜೆಪಿ ಭರವಸೆಗಳ ಬಗ್ಗೆ ಗೊತ್ತಿಲ್ಲವೇ. ನಾವು ಬಿಜೆಪಿಯವರಂತೆ ಎಲ್ಲರ ಖಾತೆಗೆ ೧೫ ಲಕ್ಷ ಹಾಕುತ್ತೇವೆ ಎಂದು ಹೇಳಿಲ್ಲ. ಬಿಜೆಪಿ ಪ್ರಣಾಳಿಕೆ ತೆಗೆದು ನೋಡಿ. ಅವರು ೧ ಲಕ್ಷದವರೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರ ಪಂಪ್ ಸೆಟ್ ಗೆ ನೀಡುವ ವಿದ್ಯತ್ ಅನ್ನು ೭ ತಾಸಿನಿಂದ ೧೦ ತಾಸಿಗೆ ಹೆಚ್ಚಳ ಮಾಡುವುದಾಗಿ ಹೇಳಿದ್ದರು.
ಜನವರಿ ೧೬ರಂದು ಬೊಮ್ಮಾಯಿ ಅವರ ಸರ್ಕಾರ ಪತ್ರಿಕೆಗಳಿಗೆ ಕೊಟ್ಟಿರುವ ಜಾಹೀರಾತು ನೋಡಿ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವ ಭರವಸೆ ನೀಡಿದ್ದಾರೆ. ಇಂದು ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡಿರುವುದು ಬಹಳ ಸಂತೋಷವಾಗಿದೆ. ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮೋದಿ ಅವರು ತಮ್ಮ ಸರ್ಕಾರ ಜನರ ವಿಶ್ವಾಗಳಿಸಲು ವಿಫಲವಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ. ಅವರು ೨೦೧೪ರ ಚುನಾವಣೆ ಸಮಯದಲ್ಲಿ ದೇಶದ ಮತದಾರರಿಗೆ ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದಿದ್ದರು. ಈಗ ಅದನ್ನೇ ಮಾಡಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಿದ್ದೇವೆ.
ಕಾಂಗ್ರೆಸ್ ಪಕ್ಷದ ನಾಲ್ಕು ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡುವುದು ನಿಶ್ಚಿತ. ಮೇ ೧೦ರಂದು ಕೇವಲ ಮತದಾನದ ದಿನವಲ್ಲ, ರಾಜ್ಯದ ಭವಿಷ್ಯ ಬದಲಿಸುವ ದಿನ, ಈ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಹಾಕುವ ದಿನ. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಈ ಯೋಜನೆ ಜಾರಿ ಮಾಡುತ್ತೇವೆ. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಅವರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದರು.