ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್ ನಾಯಕರು ಈಗಾಗಲೇ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಕಾಂಗ್ರೆಸ್ ಹೈಮಾಂಡ್ ಇಂದು ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ೧೨೪ ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್ ಹೈಕಮಾಂಡ್ಎರಡನೇ ಪಟ್ಟಿಯಲ್ಲಿ ೪೨ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು. ರಾಜ್ಯ ರಾಜಕೀಯದಲ್ಲಿ ತೀವ್ರ ಬದಲಾವಣೆ ಆಗುತ್ತಿರುವ ಹಂತದಲ್ಲೇ ಇಂದು ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ೪೩ ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್ ನೀಡಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ನಯನಾ ಮೋಟಮ್ಮಗೆ ಟಿಕೆಟ್ ನೀಡಲಾಗಿದೆ. ಕಾರ್ಯಕರ್ತರ ತೀವ್ರ ವಿರೋಧದ ಮಧ್ಯೆಯೂ ಕಾಂಗ್ರೆಸ್ ನಯನಾ ಮೋಟಮ್ಮಾಗೆ ಟಿಕೆಟ್ ನೀಡಿದೆ. ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ಬೇಡವೇ ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗ ಸಭೆ ನಡೆಸಿದ್ದರು.
ಸಾಲು ಸಾಲು ಸಭೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ನೀಡದಂತೆ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕರಿಗೂ ಮನವಿ ಮಾಡಿದ್ದರು. ನಯನಾಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲು ಖಚಿತ. ಕ್ಷೇತ್ರದ ಜನ ನಯನ ಅವರನ್ನು ಒಪ್ಪುತ್ತಿಲ್ಲ ಎಂದು ಪಕ್ಷದ ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರು ಕೂಡ ನಯನಾಗೆ ಟಿಕೆಟ್ ನೀಡಲು ವಿರೋಧಿಸಿದ್ದರು.
ಈಗಾಗಲೇ ಮೊಟ್ಟಮ್ಮ ಐದು ಬಾರಿ ಸೋಲು ಕಂಡಿದ್ದಾರೆ. ಈ ಮಧ್ಯೆ ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ ಎಂದು ಅವರೇ ಹೇಳಿಕೊಂಡಿದ್ದಾರೆ. ಹೀಗಿರುವಾಗ ಅವರ ಮಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುವುದು ಗ್ಯಾರಂಟಿ ಎನ್ನುವುದು ಬಹುತೇಕ ಕಾರ್ಯಕರ್ತರ ಅಭಿಪ್ರಾಯವಾಗಿತ್ತು. ಕಾರ್ಯಕರ್ತರ ವಿರೋಧ ಅಸಮಧಾನದ ನಡುವೆಯೂ ಕಾಂಗ್ರೆಸ್ ಹೈಕಮಾಂಡ್ ನಯನಾ ಮೋಟಮ್ಮಗೆ ಟಿಕೆಟ್ ನೀಡಿದೆ. ಹೀಗಾಗಿ ಮೂಡಿಗೆರೆ ಮೀಸಲು ಕ್ಷೇತ್ರದ ಕಾರ್ಯಕರ್ತರ ಮುಂದಿನ ನಡೆ ಏನು ಎನ್ನುವುದನ್ನು ಕಾದು ನೋಡಬೇಕಿದೆ.