ಶಿವಮೊಗ್ಗ: ಅಡಿಕೆ ನಿಷೇಧಿಸುವಂತೆ ಜಾರ್ಖಾಂಡ್ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿರುವುದು ಖಂಡನೀಯ. ಅವರು ನೀಡಿರುವ ಹೇಳಿಕೆ ವಾಪಸ್ ಪಡೆಯುವಂತೆ ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ ರಮೇಶ ಹೆಗ್ಡೆ ಆಗ್ರಹಿಸಿದರು.
ಗುರುವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ನಿಶಿಕಾಂತ್ ಹೇಳಿಕೆ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ನೋಡಿದರೆ ಬಿಜೆಪಿ ಸಂಸದರು ವೌನವಾಗಿ ಸ್ವೀಕಾರ ಮಾಡಿದಂತಿದೆ ಎಂದರು.
ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನು ದಾಖಲೆಗಳ ಸಮೇತ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡುವ ಕೆಲಸ ಆಗಬೇಕಿದೆ. ಕೇಂದ್ರ ಸರ್ಕಾರ ಇದನ್ನು ಮಾಡಬೇಕು. ಇಲ್ಲದಿದ್ದರೆ ಅಡಿಕೆ ಬಗ್ಗೆ ದಿನಕ್ಕೊಬ್ಬರು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಲಿದ್ದಾರೆ. ಇದು ಬೆಲೆಯ ಅಸ್ಥಿರತೆಗೂ ಕಾರಣವಾಗಲಿದೆ ಎಂದು ಹೇಳಿದರು.
ಲಕ್ಷಾಂತರ ರೈತರ ಬದುಕಿಗೆ ಅಡಿಕೆ ಆಸರೆಯಾಗಿದ್ದು, ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಗೌರವವಿದೆ. ಬಿಜೆಪಿ ಸರ್ಕಾರದಲ್ಲಿ ಅಡಿಕೆ ವಿರೋಧ ಮುಂದುವರೆದಿದ್ದು, ಅಪಪ್ರಚಾರದ ಅಭಿಯಾನ ನಡೆಸುತ್ತಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗಲಿದೆ ಎಂದರು.