News Karnataka Kannada
Friday, May 03 2024
ಶಿವಮೊಗ್ಗ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದೆ: ಬಿ.ವೈ.ರಾಘವೇಂದ್ರ

By Raghavendra
Photo Credit :

ಸೊರಬ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು, ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್‍ಐ ನೇಮಕಾತಿಯಲ್ಲಿನ ಆರೋಪಗಳು ಬೆಳಕಿಗೆ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಸರ್ಕಾರ ದಿಟ್ಟ ನಿಲುವು ಕೈಗೊಂಡಿದ್ದು, ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದ ಶ್ರೀ ಮುರುಘಾಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 2.5 ಕೋಟಿ ರೂ., ವೆಚ್ಚದ ಸಭಾ ಭವನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳಿಗೆ ಸೂಕ್ತವಾದ ತನಿಖೆಯಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು.

ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಸಚಿವ ಸಂಪುಟ ವಿಸ್ತರಣೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಲಭಿಸಿದರೆ ಸಂತೋಷದ ವಿಷಯ. ಅಭಿವೃದ್ಧಿಯ ದೃಷ್ಟಿಯಿಂದಲೂ ಉತ್ತಮವಾಗಲಿದೆ. ಆಡಳಿತದ ಅವಧಿ ಕೇವಲ ಒಂದು ವರ್ಷ ಬಾಕಿ ಇದ್ದು, ಮುಂದಿನ ದಿನಗಳಲ್ಲಿಯೂ ಜನಹಿತವಾದ ಆಡಳಿತವನ್ನು ನೀಡಲಿದೆ ಎಂದರು.

ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನಿಗಳು ಮತ್ತು ಅನೇಕ ಗಣ್ಯರು, ಮಠಾಧೀಶರ ಸಲಹೆ ಮೇರೆಗೆ ರಾಜ್ಯ ಸರ್ಕಾರ ಶಿವಮೊಗ್ಗ ಸಮೀಪ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನಿಡಲು ತೀರ್ಮಾನಿಸಿತ್ತು. ಆದರೆ, ಇದನ್ನು ಬಿ.ಎಸ್. ಯಡಿಯೂರಪ್ಪ ಅವರು ನಯವಾಗಿ ತಿರಸ್ಕರಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಸಾಕಷ್ಟಿದೆ. ಅಭಿವೃದ್ಧಿ ಎಂದರೆ ಕೇವಲ ಕಟ್ಟಡ-ರಸ್ತೆಗಳ ನಿರ್ಮಾಣವಲ್ಲ. ಜನತೆಯ ಬದುಕಿಗೆ ಆಸರೆಯಾಗಿ ಯೋಜನೆಗಳನ್ನು ರೂಪಿಸಿ, ಮೂಲ ಸೌಕರ್ಯಗಳಿಗೆ ಒತ್ತು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ಸ್ವಪಕ್ಷಿಯರೇ ಆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ವಿರುದ್ಧವೇ ಹಣ ನೀಡಿದ್ದರೆ ಅಧಿಕಾರ ಹಿಡಿಯುತ್ತಿದ್ದೆ ಎಂದು ಆರೋಪಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು, ಈ ಬಗ್ಗೆ ಪಕ್ಷದಲ್ಲಿ ಹಿರಿಯರಿದ್ದಾರೆ. ಕೇಂದ್ರದ ಸಂಸದನಾಗಿ ಪ್ರತಿಕ್ರಿಯೆ ನೀಡಲಾರೆ ಎಂದ ಅವರು, ರಾಜ್ಯದಲ್ಲಿ ವಿಪಕ್ಷವಾಗಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಸರ್ಕಾರದ ವಿರುದ್ಧ ಹೋರಾಟಗಳು, ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದೆ. ಸರ್ಕಾರ ವಿರುದ್ಧ ಆರೋಪಿಸಲು ಸಮರ್ಥವಾದ ಕಾರಣ ಇಲ್ಲದೇ ಇರುವುದರಿಂದ ಚುನಾವಣೆಯ ಹೊಸ್ತಿಲಲ್ಲಿ ಸಂಘಟನೆಯ ಉಳಿವಿಗಾಗಿ ರಾಜಕೀಯ ಗಿಮಿಕ್ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಲಾಗುವುದು ಎಂದಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದಲ್ಲಿ ಅಧಿಕಾರವೆಂಬುದು ಶಾಶ್ವತವಲ್ಲ. ರಾಜಕಾರಣ ಎಂಬುದು ನಿಂತ ನೀರಲ್ಲ. ಈ ನಿಟ್ಟಿನಲ್ಲಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಹೊಸ ಮುಖಗಳಿಗೆ ಆದ್ಯತೆ ನೀಡುವುದು ಸರಿ ಎಂದರು.

ಈ ಸಂದರ್ಭದಲ್ಲಿ ಜಡೆ ಸಂಸ್ಥಾನ ಮಠದ ಹಾಗೂ ಸೊರಬ ಮುರುಘಾಮಠದ ಶ್ರೀ. ಡಾ. ಮಹಾಂತ ಸ್ವಾಮೀಜಿ, ಶಾಂತಾಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಪ್ರಮುಖರಾದ ಚಿಕ್ಕಾವಲಿ ನಾಗರಾಜಗೌಡ, ನಿರಂಜನ ಕುಪ್ಪಗಡ್ಡೆ, ಗಜಾನನರಾವ್ ಉಳವಿ, ಅಶೋಕ್ ನಾಯ್ಕ್ ಅಂಡಿಗೆ, ಡಾ. ಎಚ್.ಇ. ಜ್ಞಾನೇಶ್, ಸಿ.ಪಿ. ಈರೇಶ್‍ಗೌಡ, ಯೋಗೇಶ್ ವಕೀಲ, ನಾಗರಾಜ ಗುತ್ತಿ, ವೀರೇಂದ್ರ ಪಾಟೀಲ್, ಸಂಜೀವ ಆಚಾರಿ, ಡಿ. ಶಿವಯೋಗಿ, ಬಸವರಾಜಗೌಡ ಸೇರಿದಂತೆ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು