ಶಿಕಾರಿಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಆಂಜನಾಪುರ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಿದ ನಂತರ ಅವರು ಮಾತನಾಡಿದರು. ಪುತ್ರ ವಿಜಯೇಂದ್ರ ತಾಲ್ಲೂಕಿನಲ್ಲಿಯೇ ಹೋರಾಟ ಮಾಡಬೇಕೆಂಬ ಅಪೇಕ್ಷೆ ನನಗೆ ಇದೆ. ಈ ಕ್ಷೇತ್ರದ ಜನತೆ ನನಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಬಿ.ವೈ. ವಿಜಯೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ವಿನಂತಿಸುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ಸಂಸದ ರಾಘವೇಂದ್ರ ಜತೆ ತಾಲ್ಲೂಕಿನಲ್ಲಿ ವಿಜಯೇಂದ್ರ ಹೋರಾಟ ಮಾಡುತ್ತಾನೆ. ಅವನಿಗೂ ನಿಮ್ಮ ಆಶೀರ್ವಾದ ಇರಬೇಕು ಎಂದು ಯಡಿಯೂರಪ್ಪ ಅವರು ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಸ್ವಸಹಾಯ ಸಂಘದ ಮಹಿಳೆಯರಿಗೆ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮನವಿ ಮಾಡಿದರು.