ಶಿವಮೊಗ್ಗ: ರಾಜ್ಯದಲ್ಲಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕು ಬರಪೀಡಿತ ತಾಲೂಕು ಎಂದು ಘೋಷಣೆಗೆ ಆಗ್ರಹಿಸಿ ವಿಜೇಂದ್ರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗಿದೆ.
ಬರಗಾಲ ಘೋಷಣೆಗೆ ಆಗ್ರಹಿಸಿ ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಶಿಕಾರಿಪುರದ ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಸರಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಪ್ರತಿಭಟನೆಯಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಭಾಷಣ ಮಾಡಿ, ಸರಕಾರ ಕುಂಭಕರ್ಣ ನಿದ್ದೆಯಲ್ಲಿ ಮುಳುಗಿದೆ. ರಾಜ್ಯದಲ್ಲಿ ರೈತರು ಮಳೆ ಇಲ್ಲದೇ ಕಂಗಾಲಾಗಿದ್ದಾರೆ. ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ.
ಶಿಕಾರಿಪುರದಲ್ಲಿ ಆರಂಭವಾಗಿರುವ ಹೋರಾಟ ಇಡೀ ರಾಜ್ಯ ವ್ಯಾಪಿ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ತಾಲೂಕಿನಲ್ಲಿ ಕಾಂಗ್ರೆಸ್ ಪುಡಾರಿಗಳು ತಾಲೂಕು ಕಚೇರಿಯಲ್ಲಿ ಹಣ ವಸೂಲಾತಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.
ಜಾತಿ ಜಾತಿಗಳ ನಡುವೆ ಕಾಂಗ್ರೆಸ್ ನವರು ವಿಷ ಬೀಜ ಬಿತ್ತುತ್ತಿದ್ದಾರೆ. ಮುಂದಿನ ಲೋಕಸಭೆಯಲ್ಲಿ ಬಿ.ವೈ.ರಾಘವೇಂದ್ರ ಅವರನ್ನುಸೋಲಿಸಲು ಕಾಂಗ್ರೆಸ್ ನವರು ಹಗಲುಗನಸು ಕಾಣ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ