ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಸೇವನೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿರುವುದು ಶ್ಲಾಘನೀಯ. ಹಾಗೆಯೇ ಮಾದಕ ದ್ರವ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಕಳೆದ ಮೂರು ದಿನಗಳ ಹಿಂದೆ ಶಿವಮೊಗ್ಗದ ಪೊಲೀಸ್ ಇಲಾಖೆಯು ಮನೆಯಲ್ಲಿ ಗಾಂಜಾ ಬೆಳೆಯುತ್ತಿದ್ದ ಮತ್ತು ಅದನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ದಾಳಿ ಮಾಡಿ ಅವರನ್ನು ಬಂಧಿಸಿರುವುದು ಶ್ಲಾಘನೀಯ. ಗಾಂಜಾ ಬೆಳೆಯುತ್ತಿದ್ದ ಮತ್ತು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸಿಕ್ಕಿಬಿದ್ದಿರುವುದು ವಿಷಾದನೀಯ ಎಂದು ಮನವಿದಾರರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಗಾಂಜಾ ಸೇರಿದಂತೆ ಹಲವಾರು ಮಾದಕ ದ್ರವ್ಯಗಳು, ವಿದ್ಯಾರ್ಥಿಗಳಿಗೆ ಸಿಗುತ್ತಿವೆ ಇದರಿಂದ ಆ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಇದಷ್ಟೇ ಅಲ್ಲದೆ ಆ ಮಾದಕ ದ್ರವ್ಯಗಳ ಮತ್ತಿನಲ್ಲಿ ಬೇರೆ ರೀತಿಯ ಅಪರಾಧ ಕೃತ್ಯಗಳು ಸಹ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಮಾದಕ ದ್ರವ್ಯಗಳ ವಿರೋಧಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ಹಾಜರಿದ್ದರು.