ಶಿವಮೊಗ್ಗ : ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಖರೀದಿಸಲು ಉದ್ದೇಶಿಸಿದ್ದು, ಜನವರಿ 01ರಿಂದ ಮಾರ್ಚ್ 31ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಗಳ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಸಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತಾಲೂಕಿಗೊಂದರಂತೆ ಪ್ರತಿ ತಾಲೂಕಿನಲ್ಲಿ ಖರೀದಿ ಕೇಂದ್ರ ಆರಂಭಗೊಳ್ಳಲಿದೆ. ಅಗತ್ಯವಿರುವಲ್ಲಿ ರೈತರ ನೋಂದಣಿಯನ್ನಾಧರಿಸಿ, ಶಿರಾಳಕೊಪ್ಪ ಮತ್ತು ಆನವಟ್ಟಿಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲು ಸೂಚಿಸಲಾಗುವುದು ಎಂದರು.
ಕಳೆದ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ನಿಗಧಿಪಡಿಸಲಾಗಿದ್ದ ದರ ರೂ.1940/-ನ್ನು ರೂ.2,040/-ಕ್ಕೆ ಹೆಚ್ಚಿಸಲಾಗಿದೆ. ಪ್ರತಿ ಕ್ವಿಂಟಾಲ್ ಗ್ರೇಡ್-ಎ ಭತ್ತಕ್ಕೆ ನಿಗಧಿಪಡಿಸಲಾಗಿದ್ದ ದರ ರೂ.1,960/-ನ್ನು ರೂ.2,060ಕ್ಕೆ ಹೆಚ್ಚಿಸಿ ಆದೇಶಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಭತ್ತ ಖರೀದಿ ಪ್ರಕ್ರಿಯೆ ನಡೆಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಕ್ಕೆ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25ಕ್ವಿಂಟಾಲ್ನಂತೆ ಗರಿಷ್ಟ 40ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ಭತ್ತ ಮಾರಾಟ ಮಾಡಲು ಹೆಸರು ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅರ್ಹ ರೈತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಏಜೆನ್ಸಿಯವರು ಭತ್ತ ಖರೀದಿಸಿದ ನಂತರ ರೈತರ ಬ್ಯಾಂಕ್ ಖಾತೆಗಳಿಗೆ 15ದಿನಗಳೊಳಗಾಗಿ ಹಣವನ್ನು ನೇರ ನಗದು ವರ್ಗಾವಣೆ ಮಾಡುವಂತೆ ಸೂಚಿಸಲಾಗಿದೆ ಎಂದರು.
ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಗ್ರಹಣಾ ಏಜೆನ್ಸಿಯ ಭತ್ತ ಖರೀದಿ ಕೇಂದ್ರಕ್ಕೆ ಗ್ರೇಡರ್ ಗಳ ನೇಮಕ, ತಪಾಸಣೆ, ಮತ್ತಿತರ ವಿಷಯಗಳ ಕುರಿತು ಕೃಷಿ ಇಲಾಖಾ ಅಧಿಕಾರಿಗಳು ಮೇಲ್ವಿಚಾರಣೆ ನೋಡಿಕೊಳ್ಳುವಂತೆ ಸೂಚಿಸಿರುವ ಅವರು, ಏಜೆನ್ಸಿಯವರು ಜಿಲ್ಲೆಯ ರೈತರಿಂದ ಭತ್ತವನ್ನು ಖರೀದಿಸಿ, ಗೋದಾಮುಗಳಲ್ಲಿ ಸಂಗ್ರಹಿಸಿ, ಭತ್ತದ ಹಲ್ಲಿಂಗ್ಗಾಗಿ ನೋಂದಾಯಿತ ಅಕ್ಕಿಗಿರಣಿಗಳಿಗೆ ಸಾಗಾಣಿಕೆ ಮಾಡುವಂತೆ ಸೂಚಿಸಿದರು.
ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುವ ಅಕ್ಕಿಯನ್ನು ಕಡ್ಡಾಯವಾಗಿ ಸಾರವರ್ಧಿತಗೊಳಿಸಬೇಕಾಗಿರುವುದರಿಂದ ಅಕ್ಕಿಗಿರಣಿಗಳಲ್ಲಿ ಬ್ಲೆಂಡರ್ ಯಂತ್ರವನ್ನು ಅಳವಡಿಸಿಕೊಂಡಿರುವ ಅಕ್ಕಿಗಿರಣಿಗಳನ್ನು ಮಾತ್ರ ಭತ್ತ ಹಲ್ಲಿಂಗ್ ಮಾಡಲು ನೋಂದಾಯಿಸಿಕೊಂಡು ನಿಯಮಾನುಸಾರ ಮಿಶ್ರಣಗೊಳಿಸುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕ ಅವೀನ್ ಆರ್. ಸೇರಿದಂತೆ ಆಹಾರ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆಗಳ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.