ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಬಿ ವೈ ರಾಘವೇಂದ್ರರವರು ಡಿ.15ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿ ಮಾಡಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಬಂಡವಾಳ ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸದರಿ ಕಾರ್ಖಾನೆಯ ಪುನರುಶ್ಚೇತನ ಗೊಳಿಸಲು, ಕಾರ್ಯಪಡೆಯ ಸಾಮರ್ಥ್ಯ ಮತ್ತು ಚಾಲ್ತಿಯಲ್ಲಿರುವ ಕಾರ್ಮಿಕ ಸಂಸ್ಕೃತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಉಕ್ಕು ಪ್ರಾಧಿಕಾರದ ಮುಖೇನ ಅಗತ್ಯ ಬಂಡವಾಳವನ್ನು ಹೂಡಲು ಸೂಕ್ತ ಕ್ರಮವನ್ನು ಕೈಗೊಳ್ಳಲು ಕೋರಲಾಯಿತು.
ರಕ್ಷಣಾ, ಪರಮಾಣು, ಆಟೋಮೊಬೈಲ್ ಹಾಗೂ ರೈಲ್ವೆ ವಲಯಗಳ ವಿವಿಧ ಅಗತ್ಯತೆಗಳನ್ನು ಪೂರೈಸುವ ಮೂಲಕ ”ಆತ್ಮ ನಿರ್ಭರ ಭಾರತ’ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಕೊಡುಗೆ ನೀಡಬಹುದು ಎಂದು ಮನವಿ ಮಾಡಿದರು. ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಹಾಗೂ ಇತರೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.