ಶಿವಮೊಗ್ಗ: ಸಂತೆಕಡೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮನಶಾಸ್ತ್ರಜ್ಞೆ ಡಾ.ಕೆ.ಎಸ್.ಪವಿತ್ರ ಅವರು ಮಾತನಾಡಿ, ಕಲಿಕೆ ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತವಾಗಿರದೆ ಮಕ್ಕಳ ಸವಾರ್ಂಗೀಣ ವಿಕಸನಕ್ಕೆ ಪೂರಕವಾಗಿರಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಮನಸ್ಸನ್ನು ಅರಿತುಕೊಂಡು ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ಭಾಷಣ, ಏಕಪಾತ್ರಾಭಿನಯ, ಸರ್ವಧರ್ಮ ಸಮಭಾವವನ್ನು ಸಾರುವ ರೂಪಕಗಳ ಪ್ರದರ್ಶನ ನಡೆಯಿತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಯು.ಪಿ.ಬಿನೋಯ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಿಶಾ ವರ್ಗೀಸ್ ಮತ್ತಿತರರು ಉಪಸ್ಥಿತರಿದ್ದರು.