ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರದ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ಸಸ್ಯ ಶ್ಯಾಮಲಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಅವರು ಮಂಗಳವಾರ ತಾಲೂಕಿನ ಶ್ರೀವೈಕುಂಠ ಮಂಜುನಾಥ ಕಾಮತ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪರಿಸರ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಸಸ್ಯ ಶ್ಯಾಮಲಾ ಯೋಜನೆಗೆ ಮಕ್ಕಳ ಜೊತೆಗೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಉತ್ತಮ ಶಿಕ್ಷಕ ವರ್ಗವಿದ್ದು, ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ಆವರಣದಲ್ಲಿ ಸ್ಥಳಾವಕಾಶವಿದ್ದರೆ ವಿದ್ಯಾರ್ಥಿಗಳೇ ಸಸಿಗಳನ್ನು ನೆಟ್ಟು ಪೋಷಿಸುವ ವಿನೂತನ ಯೋಜನೆಯನ್ನು ರೂಪಿಸಲಾಗಿದೆ. ರಾಜ್ಯದಲ್ಲಿ ಸುಮಾರು 50 ಲಕ್ಷ ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಹೆಚ್ಚುವರಿಯಾಗಿ 10 ಲಕ್ಷ ಸಸಿಗಳನ್ನು ಈ ಯೋಜನೆಗೆ ನೀಡುವುದಾಗಿ ತಿಳಿಸಿದ್ದಾರೆ. ಮಕ್ಕಳು ತಾವೇ ಗಿಡಗಳನ್ನು ನೆಟ್ಟು ಪೋಷಣೆ ಮಾಡಬೇಕು ಎಂದು ಅವರು ಹೇಳಿದರು.
ಶಾಲೆಗಳಲ್ಲಿ ಈಗಾಗಲೇ ಬಿಸಿಯೂಟವನ್ನು ನೀಡಲಾಗುತ್ತಿದ್ದು, ಮಕ್ಕಳು ಊಟ ಮಾಡಿದ ನಂತರ ತಮ್ಮ ಕೈಯನ್ನು ಗಿಡದ ಬುಡದಲ್ಲಿ ತೊಳೆಯಬೇಕು. ಹಸಿ ತ್ಯಾಜ್ಯವನ್ನು ಗಿಡಗಳಿಗೆ ಹಾಕಿದಾಗ ಗೊಬ್ಬರ ಸಹ ಆಗುತ್ತದೆ. ಮಕ್ಕಳು ನೀರನ್ನು ಪೋಲು ಮಾಡಬಾರದು. ಗಿಡಗಳಿಗೆ ಹಾಕುವ ಕೆಲಸ ಮಾಡಬೇಕು. ಇದಕ್ಕೆ ಇಲಾಖೆಯಿಂದ ಸೂಕ್ತ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ತಹಶೀಲ್ದಾರ್ ಹುಸೇನ್ ಸರಕಾವಸ್, ತಾಪಂ ಇಒ ಡಾ. ಎನ್.ಆರ್. ಪ್ರದೀಪ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಗ್ರಾಪಂ ಅಧ್ಯಕ್ಷ ಅಮಿತ್ ಗೌಡ, ಶ್ರೀವರದಾ ವಿದ್ಯಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊಳಿಯಪ್ಪ ಗೌಡ ಕಚವಿ, ಕಾರ್ಯದರ್ಶಿ ಕೆ. ನಾಗರಾಜ ಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪ್ರಕಾಶ್ ಮಡ್ಲೂರು, ಶಾಲೆಯ ಮುಖ್ಯಶಿಕ್ಷಕ ರೇವಣಸಿದ್ದಪ್ಪ ಸೇರಿದಂತೆ ಇತರರಿದ್ದರು.
ಸೊರಬ ತಾಲೂಕಿನ ಶ್ರೀ ವೈಕುಂಠ ಮಂಜುನಾಥ ಕಾಮತ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡ ಸಸ್ಯ ಶ್ಯಾಮಲಾ ಯೋಜನೆಗೆ ಮಕ್ಕಳ ಜೊತೆಗೆ ಸಸಿ ನೆಡುವ ಮೂಲಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.