ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾ ಬರುತ್ತಿದ್ದಾರೆಯಾದರೂ ಗಣಿಗಾರಿಕೆ ಮಾತ್ರ ನಿಂತಂತೆ ಕಾಣಿಸುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದಂತೆ ನಡೆಯುತ್ತಿದ್ದು, ರೈತರು ಇದರಿಂದ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಜಿಲ್ಲೆಯಲ್ಲಿ ಈ ಹಿಂದೆ ಅಕ್ರಮ ಗಣಿಗಾರಿಕೆ ಭಾರೀ ಸುದ್ದಿ ಮಾಡಿತ್ತು. ಪ್ರಭಾವಿಗಳೇ ಗಣಿಗಾರಿಕೆಯನ್ನು ನಡೆಸುತ್ತಿರುವ ಕಾರಣದಿಂದಾಗಿ ಏನೇ ಮಾಡಿದರೂ ತಡೆಯುವುದು ಕಷ್ಟಸಾಧ್ಯವಾಗಿದೆ. ಈಗಾಗಲೇ ಕೆಆರ್ ಎಸ್ ಜಲಾಶಯ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ನಿಷೇಧ ಹೇರಲಾಗಿದೆ. ಇನ್ನು ಪಾಂಡವಪುರ ತಾಲೂಕು ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು ಇದರತ್ತ ಯಾರೂ ಗಮನಹರಿಸಿದಂತೆ ಕಾಣುತ್ತಿಲ್ಲ.
ತಾಲೂಕಿನಲ್ಲಿ ಹಲವು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಅದರಲ್ಲಿ ಚಿಕ್ಕಬ್ಯಾಡರಹಳ್ಳಿ ಗ್ರಾಮಕ್ಕೆ ಸರಿರುವ ಸರ್ವೇ ನಂಬರ್ 71ರಲ್ಲಿ ಸುಮಾರು 70 ಎಕರೆ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದು ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಎದ್ದು ಕಾಣಿಸುತ್ತಿದೆ. ಅರಣ್ಯ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಇನ್ನಾದರೂ ಸಂಬಂಧಿಸಿದವರು ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುತ್ತಾರಾ? ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.