Bengaluru 28°C

ಜ. 4, 5 ರಂದು ಬಂಟ್ವಾಳ ತಾಲೂಕಿನ 23ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ ತಾಲೂಕಿನ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ಸಾಹಿತಿ ಎಳೆಯರ ಗೆಳೆಯ ಮುಳಿಯ ಖ್ಯಾತಿಯ ಮುಳಿಯ ಶಂಕರ ಭಟ್ಟ ಸರ್ವಾಧ್ಯಕ್ಷತೆ

ಬಂಟ್ವಾಳ : ಬಂಟ್ವಾಳ ತಾಲೂಕಿನ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ಸಾಹಿತಿ ಎಳೆಯರ ಗೆಳೆಯ ಮುಳಿಯ ಖ್ಯಾತಿಯ ಮುಳಿಯ ಶಂಕರ ಭಟ್ಟ ಸರ್ವಾಧ್ಯಕ್ಷತೆಯಲ್ಲಿ ಜನವರಿ 4 ಮತ್ತು 5ರಂದು ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ತಿಳಿಸಿದ್ದಾರೆ.


ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಸಮ್ಮೇಳನದ ವಿವರಗಳನ್ನು ನೀಡಿದರು. 4ರಂದು ಶನಿವಾರ ಅಪರಾಹ್ನ 3 ಗಂಟೆಗೆ ಕನ್ನಡ ಭುವನೇಶ್ವರಿ ಮೆರವಣಿಗೆ ಕುಕ್ಕಾಜೆ ಸಿದ್ಧಿವಿನಾಯಕ ಭಜನಾ ಮಂದಿರದಿಂದ ಆರಂಭಗೊಳ್ಳಲಿದೆ. ವಸ್ತುಪ್ರದರ್ಶನವನ್ನು ಡಾ.ಮುಕುಂದ ಪ್ರಭು ಉದ್ಘಾಟಿಸುವರು, ಪುಸ್ತಕ ಮಳಿಗೆಯನ್ನು ಚಂದ್ರಹಾಸ ರೈ ಬಾಲಾಜಿಬೈಲು ಉದ್ಘಾಟಿಸುವರು.


ಸಮ್ಮೇಳನವನ್ನು ಕನ್ನಡ ಪ್ರಾಧ್ಯಾಪಕರಾದ ಡಾ.ನಾಗವೇಣಿ ಮಂಚಿ ಉದ್ಘಾಟಿಸುವರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಸದ ಬೃಜೇಶ್ ಚೌಟ, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಪ್ರಮುಖರು ಮುಖ್ಯ ಅತಿಥಿಗಳಾಗಿರುವರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮದ ಬಳಿಕ ಮಂಚಿ ಕೊಳ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಬಬ್ರುವಾಹನ ಕಾಳಜ, ಅಗ್ರಪೂಜೆ ಯಕ್ಷಗಾನ ನಡೆಯಲಿದೆ. ಡಿ.5ರಂದು ಬೆಳಗ್ಗೆ ಗಮಕ ವಾಚನ, ಬಳಿಕ ಸಮ್ಮೇಳನಾಧ್ಯಕ್ಷ ಮುಳಿಯ ಶಂಕರ ಭಟ್ ಅವರೊಂದಿಗೆ ಸಂವಾದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ವೈಭವ ನಡೆಯಲಿದೆ.


10.30ರಿಂದ ಅನಿತಾ ನರೇಶ್ ಮಂಚಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ವಾಚನ, ಗಾಯನ, ಕುಂಚ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಕೃಷಿ ಹಾಗೂ ಸಾಹಿತ್ಯ ವಿಚಾರದಲ್ಲಿ ವಿಚಾರಗೋಷ್ಠಿ ಸಂಕಪ್ಪ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಳಿಕ ಮಂಚಿ ಕೊಳ್ನಾಡು ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ. ಮಧ್ಯಾಹ್ನ 1ರಿಂದ ಉಪನ್ಯಾಸವನ್ನು ಡಾ. ವೀಣಾ ತೋಳ್ಪಾಡಿ ಹಾಗೂ ಅನಸೂಯಾ ರಾವ್ ಸಾಲೆತ್ತೂರು ನೀಡುವರು.


ಬಳಿಕ 2 ಗಂಟೆಗೆ ಸಂಘ, ಸಂಸ್ಥೆಗಳಿಗೆ ಪುರಸ್ಕಾರ, 3ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭ ಸಂಜೆ 4ರಿಂದ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ ವಹಿಸಲಿದ್ದು, ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ಟ ಸಮಾರೋಪ ಭಾಷಣ ಮಾಡುವರು. ಬಳಿಕ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.


ಸಮ್ಮೇಳನದ ಸ್ವಾಗತ ಸಮಿತಿಯಲ್ಲಿ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಪೊಲೀಸ್ ಅಧಿಕಾರಿ ಧರಣೀದೇವಿ ಮಾಲಗತ್ತಿ ಇದ್ದಾರೆ. ಸಮ್ಮೇಳನ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು ಶಾಲಾಭಿವೃದ್ಧಿ ಸಮಿತಿ, ಪ್ರೌಢಶಾಲೆಯ ಅಧ್ಯಾಪಕ ವೃಂದ, ಹಿರಿಯ ವಿದ್ಯಾರ್ಥಿಗಳು, ಹಾಗೂ ವಿದ್ಯಾರ್ಥಿಗಳು, ಪೋಷಕರು ಪೂರ್ಣ ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಚಿತ್ರಕಲಾ ಅಧ್ಯಾಪಕರ ತಂಡ ಸಭಾಂಗಣದಲ್ಲಿ ವರ್ಣಚಿತ್ತಾರ ಮೂಡಿಸುವ ಕಾರ್ಯ ಆರಂಭಿಸಿದ್ದು, ಮಂಚಿ, ಕೊಳ್ನಾಡು ಪರಿಸರದಲ್ಲಿ ಸಾಹಿತ್ಯ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದರು.


ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಪ್ರಧಾನ ಸಂಯೋಜಕ ರಾಮಪ್ರಸಾದ್ ರೈ ತಿರುವಾಜೆ, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪ್ರಧಾನ ಕಾರ್ಯದರ್ಶಿಗಳಾದ ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ, ಗೌರವ ಕೋಶಾಧಿಕಾರಿ ಡಿ.ಬಿ.ಅಬ್ದುಲ್ ರಹಿಮಾನ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಮಂಚಿ, ಸಂಚಾಲಕ ಅಬ್ಬಾಸ್ ಆಲಿ ಬೋಳಂತೂರು, ಕೋಶಾಧಿಕಾರಿ ಸುಲೈಮಾನ್ ಜಿ.ಸುರಿಬೈಲು, ಮುಖ್ಯೋಪಾಧ್ಯಾಯಿನಿ ಸುಶೀಲಾ ವಿಟ್ಲ, ಆರ್ಥಿಕ ಸಮಿತಿ ಸಂಚಾಲಕ ನಿಶ್ಚಲ್ ಜಿ.ಶೆಟ್ಟಿ ಕಲ್ಲಾಡಿ, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಕಸಾಪ ಸಂಘಸಂಸ್ಥೆಗಳ ಪ್ರತಿನಿಧಿ ಅಬುಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದರು.


Nk Channel Final 21 09 2023