Bengaluru 26°C

ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಮಂಗಳೂರಿನಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥ’

ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ 'ಸಂವಿಧಾನ ಸಂರಕ್ಷಣಾ ಜಾಥ ನಡೆಯಿತು.

ಮಂಗಳೂರು: ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥ ನಡೆಯಿತು.


ಬೆಳಗ್ಗೆ ನಗರದ ಅಂಬೇಡ್ಕರ್ ವೃತ್ತದಿಂದ (ಹಳೆ ಜ್ಯೋತಿ ಸರ್ಕಲ್) ಮಿನಿ ವಿಧಾನ ಸೌಧದ ವರೆಗೆ ‘ಸಂವಿಧಾನ ಸಂರಕ್ಷಣಾ ಜಾಥ’ ನಡೆದು ಬಳಿಕ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಃಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮಾತನಾಡಿ ‘ ದೇಶದ ಚರಿತ್ರೆ ತಿಳಿಯದವರಿಗೆ ದೇಶವನ್ನು ಕಟ್ಟಲು ಅಸಾಧ್ಯ. ಅಮಿತ್ ಶಾರೆ ನೀವು ಈ ದೇಶದ ಸಂವಿಧಾನವನ್ನು ಓದಿದ್ದೀರಾ? ಎಂದು ಪ್ರಶ್ನಿಸಿದರು.


ಅಮಿತ್ ಶಾ ಹೇಳಿಕೆಯಿಂದಾಗಿ ದೇಶದ ಕೋಟ್ಯಂತರ ಜನ ನೊಂದಿದ್ದಾರೆ. ಸಂವಿಧಾನಕ್ಕೆ ಅವಮಾನ ಮಾಡಿರುವ ಅಮಿತ್ ಶಾರನ್ನು ಸಂಪುಟದಿಂದ ವಜಾಗೊಳಿಸಲು ಪ್ರಧಾನಿಗೆ ಸೂಚನೆ ನೀಡಬೇಕು ಎಂದು ರಾಷ್ಟ್ರಪತಿಯನ್ನು ಆಗ್ರಹಿಸಿದರು.


ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ‘ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಮಾಜಿಕ ನ್ಯಾಯ ವಂಚಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ.ಮೋದಿಯವರು ಸಂವಿಧಾನದ ಪುಸ್ತಕ ಮುಂದಿಟ್ಟು ನಾಟಕ ಮಾಡಿದ್ದಾರೆ ಎಂದರು.


ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡುತ್ತಿದೆ.ಜೈ ಗಾಂಧಿ,ಜೈ ಭೀಮ್ ,ಜೈ ಸಂವಿಧಾನ ನಮ್ಮ ಧೈಯವಾಗಿದೆ ಎಂದು ರೈ ಹೇಳಿದರು. ಸಂವಿಧಾನದ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಅಮಿತ್ ಶಾ ರಾಜೀನಾಮೆ ನೀಡುವ ತನಕ‌ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾಗೊಳಿಸಿಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿ ವಿಧಾನ ಕ್ಷೇತ್ರಗಳಲ್ಲೂ ಹೋರಾಟ ನಡೆಸಲಿದೆ ಎಂದು ಹೇಳಿದರು.


ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಮಾತನಾಡಿ ಅಂಬೇಡ್ಕರ್ ಕಾರಣದಿಂದಾಗಿ ಅಮಿತ್ ಶಾ ಸಚಿವರಾಗಿದ್ದಾರೆ. ಅಂಬೇಡ್ಕರ್ ವಿಶ್ವಜ್ಞಾನಿಯಾಗಿದ್ದಾರೆ.ಅಂಬೇಡ್ಕರ್ ಹೆಸರಲ್ಲ ಅವರು ನಮ್ಮ ಉಸಿರು ಎಂದರು.


ಗೇರು ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಮೇಯರ್ ಗಳಾದ ಶಶೀಧರ ಹೆಗ್ಡೆ ಹಾಗೂ ಅಶ್ರಫ್, ಕಾಂಗ್ರೆಸ್ ಧುರೀಣ ರಾದ ಪದ್ಮರಾಜ್ ಆರ್ ಪೂಜಾರಿ, ಮಿಥುನ್ ರೈ, ಅನಿಲ್ ಕುಮಾರ್, ಟಿ.ಕೆ‌.ಸುಧೀರ್ , ಶಾಲೆಟ್ ಪಿಂಟೊ, ಇನಾಯತ್ ಅಲಿ, ಎಂಜಿ ಹೆಗಡೆ,ಲುಕ್ಮಾನ್ ಬಂಟ್ವಾಳ, ಬಶೀರ್ ಬೈಕಂಪಾಡಿ,ಕೆಕೆ ಶಾಹುಲ್ ಹಮೀದ್, ಸುಹಾನ್ ಆಳ್ವ, ಮತ್ತಿತರರು ಭಾಗವಹಿಸಿದ್ದರು.


Nk Channel Final 21 09 2023