ಮಂಗಳೂರು : ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ವತಿಯಿಂದ ಮದರ್ ತೆರೇಸಾ ಅವರ 28ನೇ ಸಂಸ್ಮರಣ ದಿನದ ಅಂಗವಾಗಿ ಸೆ.11ರಂದು ಬೆಳಗ್ಗೆ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ ಅವರು, ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿನಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ಉದ್ಘಾಟಿಸಲಿದ್ದಾರೆ. ಸಾಹಿತಿ ಡಾ. ಕೆ. ಶರೀಫಾ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅ. ವಂ. ಡಾ. ಅಲೋಶಿಯಸ್ ಪಾವ್ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 8.30ಕ್ಕೆ ಏಕತಾರಿ ಹಾಡುಗಾರ ನಾದಾ ಮಣಿನಾಲ್ಕೂರು ಅವರಿಂದ ಸೌಹಾರ್ದ ಗಾಯನ ನಡೆಯಲಿದೆ.

ಅವಿಭಜಿತ ದ.ಕ ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಏಳಿಗಾಗಿ ಶ್ರಮಿಸಿದ, ಡಾ.ಬಾಬು ಜಗ ಜೀವನ್ ರಾಮ್ ಪ್ರಶಸ್ತಿ ಪುರಸ್ಕೃತ ಕರಿಯ ಕೆ. ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಸಂತೋಷ್‌ ಡಿಸೋಜಾ, ವೇದಿಕೆ ಉಪಾಧ್ಯಕ್ಷ ಇಲಿಯಾಸ್‌ ಎಲಿಯಾಸ್‌ ಫೆರ್ನಾಂಡಿಸ್‌, ಸಾಮರಸ್ಯ ಮಂಗಳೂರು ಅಧ್ಯಕ್ಷೆ ಮಂಜುಳಾ ನಾಯಕ್, ದಲಿತ ಚಳುವಳಿ ಯುವ ನಾಯಕ ರಾಕೇಶ್ ಕುಂದರ್, ಸಾಮಾಜಿಕ ಚಿಂತಕ ರೆಹಮಾನ್ ಖಾನ್ ಕುಂಜತ್ತಬೈಲು, ಮಹಿಳಾ ನಾಯಕಿ ಸುಮತಿ ಎಸ್. ಹೆಗ್ಡೆ ಉಪಸ್ಥಿತರಿದ್ದರು.