ಪುತ್ತೂರು: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ದ.ಕ. ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದರು.

ಆರೇಲ್ತಡಿ ಇರ್ವೆರ್ ಉಳ್ಳಾಕು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನಕ್ಕೆ ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ಆಗಮಿಸಬೇಕಿದ್ದ ರೆಡ್ಡಿ ಅಂದು ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಆಗಮಿಸಲು ಸಾಧ್ಯವಾಗಿರಲಿಲ್ಲ.

ಮೇ 13 ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ ಇಟ್ಟಿದ್ದರು. ಇಂದಿನಿಂದ 1 ತಿಂಗಳ ಒಳಗಡೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ದೈವ ನುಡಿ ನೀಡಿತ್ತು. ಗ್ರಾಮದ ದೈವ ಕೆಡೆಂಜೋಡಿತ್ತಾಯಿ ದೈವ ರೆಡ್ಡಿಗೆ ಜೈಲಿನಿಂದ ಬಿಡುಗಡೆಯಾಗುವ ಅಭಯ ನೀಡಿತ್ತು.

ದೈವದ ಅಭಯದಂತೆ ಒಂದು ತಿಂಗಳ ಒಳಗೆ ಗಾಲಿ ಜನಾರ್ದನ ರೆಡ್ಡಿ ಅವರು ಬಿಡುಗಡೆಯಾಗಿದ್ದರು. ಹಾಗಾಗಿ ಇಂದು(ಜು.16) ಸವಣೂರಿನಲ್ಲಿರುವ ಇರುವೆರ್ ಉಳ್ಳಾಕುಲು ಮತ್ತು ಕೆಡೆಂಜೋಡಿತ್ತಾಯಿ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದ್ದರು. ಬಿಡುಗಡೆಯ ಒಂದುವರೆ ತಿಂಗಳ ಬಳಿಕ ಸಂಕ್ರಮಣದ ವಿಶೇಷ ದಿನದಂದು ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದ್ದಾರೆ.

ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾ‌ರ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು.