ಮಂಗಳೂರು: ಮಂಗಳೂರಿನಲ್ಲಿ ಹುಟ್ಟಿ ಉತ್ತರ ಭಾರತದಲ್ಲಿ ರಾಜಕಾರಣ ಮಾಡಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ನಗರದ ಸರ್ಕ್ಯೂಟ್ ಹೌಸ್ ಬಳಿಯಿಂದ ಬಿಜೈ ಸರ್ಕಲ್ ವರೆಗಿನ ರಸ್ತೆಗೆ ಇಡಲಾಗಿದೆ. ಈ ರಸ್ತೆಯನ್ನು ಮಹಾನಗರ ಪಾಲಿಕೆ ವತಿಯಿಂದ ಅಧಿಕೃತವಾಗಿ “ಜಾರ್ಜ್ ಫೆರ್ನಾಂಡಿಸ್ ರಸ್ತೆ” ಎಂದು ನಾಮಕರಣ ಮಾಡಲಾಗಿದೆ.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವಾನ್ ಡಿಸೋಜ, ಭರತ್ ಶೆಟ್ಟಿ ಮತ್ತಿತರರ ಉಪಸ್ಥಿತಿಯಲ್ಲಿ ಮೇಯರ್ ಸುಧೀರ್ ಶೆಟ್ಟಿ ರಸ್ತೆ ನಾಮಕರಣ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಮಂಗಳೂರಿನಲ್ಲಿ ಜನಿಸಿ ಉತ್ತರ ಭಾರತದಲ್ಲಿ ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆದವರು ಜಾರ್ಜ್ ಫೆರ್ನಾಂಡಿಸ್. ಚಿಕ್ಕಂದಿನಲ್ಲೇ ಅನ್ಯಾಯದ ವಿರುದ್ಧ ಸಿಡಿದೇಳುವ ಸ್ವಭಾವದ ಅವರು ಕ್ರಿಶ್ಚಿಯನ್ ಪಾದ್ರಿಯಾಗಬೇಕೆಂದು ಬಯಸಿದ್ದರು. ಆದರೆ ಅವರು ದೇಶದ ಅಮೂಲ್ಯ ಆಸ್ತಿಯಾದರು. ಉದ್ಯೋಗವನ್ನು ಅರಸಿ ಮುಂಬೈಗೆ ಹೋದ ಅವರು ಅಲ್ಲಿ ಕಾರ್ಮಿಕ ನಾಯಕನಾಗಿ ಕೊನೆಗೆ ದೇಶವೇ ಮೆಚ್ಚುವಂತಹ ರಾಜಕಾರಣಿಯಾದರು ಎಂದು ಸ್ಮರಿಸಿದರು.

