ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರ ಲಭ್ಯತೆ ಆಧರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಸಚಿವ ವಿ. ಸೋಮಣ್ಣ, ಸಂಸದ ಕ್ಯಾ | ಬ್ರಿಜೇಶ್ ಚೌಟ ಹಾಗೂ ದ. ಕ.ದ ಹಿಂದಿನ ಸಂಸದರು ಈ ಬಗ್ಗೆ ಬಹಳಷ್ಟು ಶ್ರಮಪಟ್ಟಿದ್ದಾರೆ. ಕೇಂದ್ರ ಸರಕಾರದ ನಿರ್ಧಾರವು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿದೆ. ಕೇರಳದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರೂ ಈ ನಿರ್ಧಾರದಿಂದ ಕೇರಳಕ್ಕೆ ತೊಂದರೆಯಾಗುವುದಿಲ್ಲ ಮತ್ತು ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಸ್ಥಳೀಯ ಕಾಂಗ್ರೆಸ್ ನಾಯಕರು ಬೆಂಬಲಿಸಿಲ್ಲ ಎಂದರು.

ರೈಲುಗಳು ಮಂಗಳೂರು ಸೆಂಟ್ರಲ್ ಬದಲಿಗೆ ಪಡೀಲ್ ಮಾರ್ಗವಾಗಿ ಸಂಚರಿ ಸಿದರೆ ಸುಮಾರು ಒಂದೂ ವರೆ ಗಂಟೆ ಸಮಯ ಉಳಿತಾಯ ಆಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಉಡುಪಿ ಹಾಗೂ ದ.ಕ.ದ ಸಂಸದರ ಮಟ್ಟದಲ್ಲಿರುವ ಸಣ್ಣಪುಟ್ಟ ಅಭಿಪ್ರಾಯ ಭಿನ್ನತೆಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದರು.

ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರಮುಖರಾದ ಯತೀಶ್ ಅರ್ವಾರ್, ಪ್ರೇಮಾನಂದ ಶೆಟ್ಟಿ, ಸಂಜಯ್ ಪ್ರಭು ಮೊದಲಾದವರಿದ್ದರು.