ಮಂಗಳೂರು: ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದೇ ವೇಳೆ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಕಾನೂನು ಕೈಗೆತ್ತಿಕೊಳ್ಳುವ ಘಟನೆಗಳನ್ನು ತಕ್ಷಣ ತಡೆಗಟ್ಟಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ ವಾಟಾಲ್ ನಾಗರಾಜ್ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳ ನಾಯಕರ ಕೇಸ್ ವಾಪಸ್ ಪಡೆದದ್ದು ಸ್ವಾಗತಾರ್ಹ. ಆದರೆ ಪ್ರಮೋದ್ ಮುತಾಲಿಕ್, ಚೈತ್ರ ಕುಂದಾಪುರ ಸೇರಿದಂತೆ ಹಲವು ಸಂಘಪರಿವಾರದ ಬಾಡಿಗೆ ದ್ವೇಷ ಭಾಷಣಗಾರರ ಕೇಸ್ ಅನ್ನು ವಾಪಸ್ ಪಡೆದಿರುವುದು ದುರದೃಷ್ಟಕರವಾಗಿದೆ. ಹಾಗೂ ಕಾಂಗ್ರೆಸ್ ಸರ್ಕಾರವೇ ಜಾರಿಗೆ ತಂದ ಟಿಪ್ಪು ಜಯಂತಿ ಹೆಸರಿನಲ್ಲಿ ಅಮಾಯಕರ ವಿರುದ್ಧ ದಾಖಲಾದ ಪ್ರಕರಣ, ಹಿಜಾಬ್, 2ಬಿ ಮೀಸಲಾತಿ, ಒಳ ಮೀಸಲಾತಿ ಪರ ಹೋರಾಟಗಾರರ ಮೇಲಿನ ಪ್ರಕರಣ ಯಾಕೆ ಹಿಂಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಅಗ್ನಾಡಿ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಕಾರ್ಯದರ್ಶಿ ನಿಸಾರ್ ವಲವೂರು, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಸೇರದಂತೆ ಜಿಲ್ಲಾ, ಅಸ್ಸೆಂಬ್ಳಿ ನಾಯಕರು, ವಿಮೆನ್ ಇಂಡಿಯಾ ಮೂವ್ಮೆಂಟ್ ನಾಯಕಿಯರು ಉಪಸ್ಥಿತರಿದ್ದರು. ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

View this post on Instagram

A post shared by News Karnataka (@newskarnataka)