ಮಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ವಿರುದ್ಧ ವಿವಾದಾತ್ಮಕ ಹೇಳಿಕೆ‌ ನೀಡಿದ್ದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಂಗಳೂರು ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ವೇಳೆ ಐವನ್‌ ಡಿಸೋಜ, ರಾಜ್ಯಪಾಲರನ್ನು ವಾಪಸ್‌ ಕರೆಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.