ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ವರ್ಗಾವಣೆಗಳ ಕಾಲ, ಇತ್ತೀಚೆಗೆ ಜಿಲ್ಲೆಯಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇದೀಗ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿರುವ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುಮಾರು 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅಹಿತಕರ ಘಟನೆಗಳ ನಡುವೆ ಎಸ್ಪಿ ಹಾಗೂ ಪೊಲೀಸ್ ಆಯುಕ್ತರನ್ನು ರಾಜ್ಯ ಸರಕಾರ ಎತ್ತಂಗಡಿ ಮಾಡಿತ್ತು. ಜಿಲ್ಲೆಗೆ ಇಬ್ಬರು ಯುವ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ನಿಯೋಜಿಸಿತ್ತು, ಈ ನಡುವೆ ಜಿಲ್ಲೆಯ ಪೊಲೀಸ್ ಠಾಣೆಗಲ್ಲಿ ಹಲವಾರು ವರ್ಷಗಳಿಂದ ಟಿಕಾಣಿ ಹೂಡಿದ್ದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆಗೆ ಸಾರ್ವಜನಿಕರಿಂದ ಆಗ್ರಹ ಕೇಳಿ ಬಂದಿತ್ತು.
ಇದೀಗ ಪೊಲೀಸ್ ಕಮಿಷನರ್ ಸುಧೀರ್ ಶೆಟ್ಟಿ 56 ಸಿಬ್ಬಂದಿಯನ್ನು ವರ್ಗಾಯಿಸಿ ಆದೇಶಿಸಿದ್ದಾರೆ. ವರ್ಗಾವಣೆಗೊಂಡಿರುವವರಲ್ಲಿ ಸಿಸಿಬಿ, ಸೆನ್ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಠಾಣೆಗಳ ಹಲವು ಪೊಲೀಸರು ಸೇರಿದ್ದಾರೆ.
ಹಲವು ವರ್ಷಗಳಿಂದ ಒಂದೇ ಕಡೆ ತಳ ಊರಿದ್ದ ಸಿಬ್ಬಂದಿಗಳ ಸ್ಥಳಾಂತರ ಮಾಡಲಾಗಿದೆ. ಕೆಲ ವಾರಗಳ ಹಿಂದೆ ಕರಾವಳಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಶೀದ್ ಶೇಕ್ ಕೂಡ ವರ್ಗಾವಣೆಯಾಗಿದ್ದಾರೆ.

