ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ – ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ 2ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬಂಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು.

ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.