ಮೈಸೂರು: ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ಸಾಕ್ಷ್ಯಾಧಾರದ ಕೊರೆತೆ ಹಿನ್ನೆಲೆಯಲ್ಲಿ ಕೈ ಬಿಟ್ಟಿತ್ತು. ಇದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ ಐಟಿಗೆ ವಹಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನ ಸುತ್ತೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಇಂದು ಸುತ್ತೂರು ಜಾತ್ರಾಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಎಸ್ ಐಟಿಗೆ ಹಸ್ತಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಈ ಪ್ರಕರಣವನ್ನು ಸಿಬಿಐ ಸಾಕ್ಷ್ಯಾಧಾರಗಳ ನೆಪವೊಡ್ಡಿ ತನಿಖೆ ಕೈಬಿಟ್ಟಿತ್ತು. ಆದರೆ ಪ್ರಾಥಮಿಕ ವರದಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಆಧಾರಿಸಿ ತನಿಖೆಯನ್ನು ಎಸ್ ಐಟಿಗೆ ವಹಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದರು.
ಕೇಂದ್ರ ಸರ್ಕಾರ ಸಿಬಿಐ ದುರ್ಬಳಕೆ ಮಾಡಿಕೊಂಡು ರೆಡ್ಡಿ ಸಹೋದರರನ್ನು ಹಗರಣದಿಂದ ಪಾರು ಮಾಡುವ ಉದ್ದೇಶದಿಂದ ಈ ಪ್ರಕರಣವನ್ನು ಕೈಬಿಟ್ಟಿರುವ ಸಾಧ್ಯತೆ ಇತ್ತೇನೂ ಎಂದು ಅನುಮಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಯುಪಿಐ ಸರ್ಕಾರ ಇದ್ದಾಗ ಸಿಬಿಐನ್ನು ರಾಜ್ಯ ಬಿಜೆಪಿ ನಾಯಕರು ಚೋರ್ ಭಾಚಾವೋ ಸಂಸ್ಥೆ ಎನ್ನುತ್ತಿದ್ದರು. ಆದರೆ ಈಗ ಅದೇ ನಾಯಕರಿಗೆ ಸಿಬಿಐ ಮೇಲೆ ದಿಢೀರ್ ವ್ಯಾಮೋಹ ಬಂದಿದೆ ಎಂದು ವ್ಯಂಗ್ಯವಾಡಿದರು. ಸಿಬಿಐ ಕಾನೂನಾತ್ಮಕ ತನಿಖೆ ಮಾಡದ ಕಾರಣ ರಾಜ್ಯ ಸರ್ಕಾರ ಈ ತನಿಖೆಯನ್ನು ಎಸ್ ಐಟಿಗೆ ವಹಿಸಿದೆ ಎಂದರು.