ಮೈಸೂರು: ಆಷಾಡ ಮಾಸದ ಅಂಗವಾಗಿ ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಆಷಾಡದ ಮಾಸದ ನಾಲ್ಕು ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನ ನಿಷೇಧಿಸಿ ನಗರ ಪೊಲೀಸರು ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕಳೆದ 6 ವರ್ಷಗಳಿಂದ ಇರುವಂತೆ ಈ ವರ್ಷವೂ ಸಹ ಜುಲೈ 20, 27 ಮತ್ತು ಆಗಸ್ಟ್ 3 ಮತ್ತು 10 ರ ಶುಕ್ರವಾರದಂತೆ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾಧಿಗಳು ತಮ್ಮ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್ನಲ್ಲಿ ನಿಲುಗಡೆ ಮಾಡಿ ದೇವಸ್ಥಾನ ಆಡಳಿತ ಮಂಡಳಿ ವ್ಯವಸ್ಥೆ ಮಾಡಿರುವ ಉಚಿತ ಕೆ.ಎಸ್.ಆರ್.ಟಿ.ಸಿ ಬಸ್ಗಳಲ್ಲಿ ದೇವಸ್ಥಾನಕ್ಕೆ ತೆರಳಬೇಕಾಗಿರುತ್ತದೆ. ಉಚಿತ ಬಸ್ ಸೌಲಭ್ಯ ಬೆಳಗಿನ ಜಾವ 2.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಉಚಿತ ಪ್ರಸಾದ ವಿನಿಯೋಗದ ವಾಹನಗಳಿಗೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ಬಸ್ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಜಾಗದಲ್ಲಿ ವ್ಯವಸ್ಥೆ ಮಾಡಿದ್ದು ಪ್ರಸಾದ ವಿನಿಯೋಗದ ವಾಹನಗಳಿಗೆ ಜಿಲ್ಲಾಡಳಿತದಿಂದ ನೀಡುವ ಪಾಸ್ ಕಡ್ಡಾಯವಾಗಿರುತ್ತದೆ. ನಿಗಧಿಪಡಿಸಿದ ಸಮಯದಲ್ಲಿಯೇ ಪ್ರಸಾದ ವಿನಿಯೋಗ ಮಾಡಬೇಕಾಗಿರುತ್ತದೆ. ಮುಂಚಿತವಾಗಿ ಅಥವಾ ತಡವಾಗಿ ಬಂದ ಪ್ರಸಾದ ವಿನಿಯೋಗದ ವಾಹನಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಪ್ರತಿ ಆಷಾಡ ಶುಕ್ರವಾರದ ಹಿಂದಿನ ದಿನ ಅಂದರೆ ಗುರುವಾರದ ರಾತ್ರಿ 10.00 ಗಂಟೆಯಿಂದಲೇ ಯಾವುದೇ ರೀತಿಯ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶಿಸಲು ನಿಷೇಧಿಸಿಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿರುವ ನಿವಾಸಿಗಳು ತಮ್ಮ ವಾಹನಗಳಿಗೆ ಅನುಮತಿ ಪಡೆಯಲು ಅಗತ್ಯ ದಾಖಲಾತಿಗಳಾದ ಡಿ.ಎಲ್, ವಾಹನದ ದಾಖಲಾತಿ ಮತದಾರರ ಗುರುತಿನ ಚೀಟಿಗಳ ಜೆರಾಕ್ಸ್ ಪ್ರತಿಗಳನ್ನು ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಸಲ್ಲಿಸಿದ್ದಲ್ಲಿ ಅವುಗಳನ್ನು ಪರಿಶೀಲಿಸಿ ಅಂತಹ ವಾಹನಗಳ ಪ್ರವೇಶಕ್ಕೆ ಕೆಲವು ನಿರ್ಬಂಧನೆಗಳನ್ನು ವಿಧಿಸಿ ಅನುಮತಿ ಪಾಸ್ ನೀಡಲಾಗುತ್ತಿದೆ. ಇದರೊಂದಿಗೆ ದೇವಸ್ಥಾನಕ್ಕೆ ಬರುವ ಅಂಗವಿಕಲರಿಗೆ, ವೃದ್ದರಿಗೆ ಉಚಿತ ಎಲೆಕ್ಟ್ರಿಕ್ ವಾಹನಗಳ ವ್ಯವಸ್ಥೆ ಮಾಡಿದ್ದು ಮಹಿಷಾಸುರ ಪ್ರತಿಮೆಯಿಂದ ದೇವಸ್ಥಾನದವರೆಗೆ ಈ ವ್ಯವಸ್ಥೆ ಮಾಡಲಾಗಿದೆ.
ಬಂದೋಬಸ್ತ್ಗೆ ಬರುವ ಸರ್ಕಾರಿ ವಾಹನಗಳು ಹಾಗೂ ಪೊಲೀಸ್ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ದೇವಿಕೆರೆ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು ಕಡ್ಡಾಯವಾಗಿ ಎಲ್ಲಾ ವಾಹನಗಳನ್ನು ದೇವಿಕೆರೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕಾಗಿದ್ದು, ಉತ್ತನಹಳ್ಳಿ ರಸ್ತೆಯ ಕಡೆಯಿಂದ ಚಾಮುಂಡಿ ಬೆಟ್ಟಕ್ಕೆ ಬರುವ ಮತ್ತು ಹೋಗುವ ವಾಹನಗಳಿಗೆ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ದೇವಸ್ಥಾನದಲ್ಲಿ ಪ್ರತ್ಯೇಕ ಹೆಲ್ಪ್ ಲೈನ್, ವಿದ್ಯುತ್ ದೀಪಗಳ ವ್ಯವಸ್ಥೆ, ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮಾರಗಳನ್ನು ಅಳವಡಿಸಲಾಗಿರುತ್ತದೆ. ಮತ್ತು ಹೆಲಿಪ್ಯಾಡ್ನಲ್ಲಿ ವಾಹನಗಳ ನಿಲುಗಡೆಗೆ ಭದ್ರತಾ ವ್ಯವಸ್ಥೆ ತಾತ್ಕಾಲಿಕ, ಬಸ್ ನಿಲ್ದಾಣ, ಶೌಚಾಲಯ, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ, ಕುಡಿಯುವ ನೀರು ಮುಂತಾದ ಮೂಲ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು ಭಕ್ತಾದಿಗಳು ಯಾವುದೇ ಭೀತಿ ಇಲ್ಲದೇ ವಾಹನಗಳನ್ನು ನಿಗಧಿತ ಸ್ಥಳದಲ್ಲಿ ನಿಲುಗಡೆಗೊಳಿಸಿ ದೇವರ ದರ್ಶನ ಪಡೆಯಬಹುದಾಗಿದೆ.