ಮೈಸೂರು: ಈ ವರ್ಷ ಮೈಸೂರಿನಲ್ಲಿ ಆಚರಿಸುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುತ್ತಿದ್ದು, ಈ ಸಂಬಂಧ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಕೇಂದ್ರ ಆಯುಷ್ ಮಂತ್ರಾಲಯದ ನಿರ್ದೇಶಕ ವಿಕ್ರಂಸಿಂಗ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಜೂ.20 ಮತ್ತು 21 ರಂದು ಯೋಗ ವಸ್ತುಪ್ರದರ್ಶನವನ್ನು ದಸರ ವಸ್ತು ಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದೆ. ಯೋಗಕ್ಕೆ ಮೈಸೂರು ಸಾಕಷ್ಟು ಕೊಡುಗೆ ನೀಡಿದೆ. ಸಾಕಷ್ಟು ಯೋಗ ತಜ್ಞರು ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದೇಶಿ ಪ್ರಜೆಗಳು ಮೈಸೂರಿಗೆ ಆಗಮಿಸಿ ಯೋಗ ಕಲಿಯುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದ ಪ್ರಧಾನಿಯವರು ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿದ್ದು ಇದು ಮೈಸೂರಿನ ಗರಿಮೆ ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಮೈಸೂರಿನ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಭಾರತ ಸರ್ಕಾರ ಹಾಗೂ ಆಯುಷ್ ಮಂತ್ರಾಲಯದಿಂದ ಆಯೋಜಿಸಲಾಗುತ್ತಿದೆ. ಯೋಗ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯವಶ್ಯಕ. ಈ ವಸ್ತು ಪ್ರದರ್ಶನದಲ್ಲಿ ಡಿಜಿಟಲ್ ಎಕ್ಸಿಬಿಷನ್ ಹಾಗೂ ಸ್ಟಾಲ್ ಎಕ್ಸಿಬಿಷನ್ ಎಂದು ಎರಡು ಬಾಗಗಳಲ್ಲಿ ಇರುತ್ತದೆ ಎಂದು ಮಾಹಿತಿ ನೀಡಿದರು.
ಮುರಾರ್ಜಿ ದೇಸಾಯಿ ನ್ಯಾಷನಲ್ ಇನ್ಸಿಟ್ಯೂಟ್ನ ನಿರ್ದೇಶಕ ಬಸವರೆಡ್ಡಿ ಮಾತನಾಡಿ, ಈ ವರ್ಷ ಸ್ವಾತಂತ್ರ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಕರ್ನಾಟಕದ 75 ಸ್ಥಳಗಳಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಯೋಗ ದಿನಾಚರಣೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಪ್ರಧಾನಿಯವರ ಯೋಗ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳು, ಪೊಲೀಸ್ ಸಿಬ್ಬಂದಿಗಳು, ದಿವ್ಯಾಂಗರು, ಲಿಂಗತ್ವ ಅಲ್ಪಸಂಖ್ಯಾತರು, ಪೌರಕಾರ್ಮಿಕರು ಸೇರಿದಂತೆ ಇನ್ನೂ ಮುಂತಾದ ವಿವಿಧ ವರ್ಗಗಳ ಜನರಿಗೆ ಯೋಗ ಪ್ರದರ್ಶನದಲ್ಲಿ ಅವಕಾಶ ನೀಡಲಾಗುವುದು. ಅರಮನೆ ಆವರಣದಲ್ಲಿ 12 ಸಾವಿರ ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಆಯುಷ್ ಇಲಾಖೆಯ ಆಯುಕ್ತ ರಾಮಚಂದ್ರ, ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಅಪರ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.