ರಾಮನಗರ: ಕಾಂಗ್ರೆಸ್ ಸೇರಲು ನಿರ್ಧರಿಸಿದ ನಂತರ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರಕ್ಕೆ ತಂದಿದ್ದಾಗಿ ಜೆಡಿಎಸ್ ಬಂಡಾಯ ಶಾಸಕ ಬಾಲಕೃಷ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ಹಳ್ಳಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಿಕೊಡುವುದರ ಜತೆಗೆ ಸಾಮಾನ್ಯ ಜನರೊಂದಿಗೆ ಒಡನಾಟ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ, ಬೇರೆ ರಾಜಕಾರಣಿಗಳಂತೆ ಮೂರು ತಿಂಗಳಿಗೋ, ಆರು ತಿಂಗಳಿಗೊಮ್ಮೆ ಕ್ಷೇತ್ರಕ್ಕೆ ಬರುವುದಿಲ್ಲ. ಜನರಿಗೆ ಕತೆ ಹೇಳಿ ಪೊಳ್ಳು ಭರವಸೆ ನೀಡಿ ಹೋಗುವ ರಾಜಕಾರಣಿಯೂ ನಾನಲ್ಲ. ಪ್ರತಿನಿತ್ಯ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಇದನ್ನು ಕ್ಷೇತ್ರದ ಮತದಾರರು ಅರಿತುಕೊಳ್ಳಬೇಕು ಎಂದು ಹೇಳಿದರು.
ಮೈಸೂರಿನಲ್ಲಿ ಮಾ.25ರಂದು ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜೆಡಿಎಸ್ ನ 7 ಮಂದಿ ಬಂಡಾಯ ಶಾಸಕರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇವೆ, ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನ ಬಂದಿದೆ. ಅದರಂತೆ ಏಳು ಮಂದಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದೇವೆ, ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕ್ಷೇತ್ರ ವ್ಯಾಪ್ತಿಯ ಬಿಡದಿ, ಕೂಟಗಲ್ ಹಾಗೂ ಮಾಗಡಿಯಲ್ಲಿ ನನ್ನ ಬೆಂಬಲಿಗರು, ಹಿತೈಷಿಗಳು ಹಾಗೂ ಕಾರ್ಯಕರ್ತರ ಸಭೆ ಕರೆದು ಚರ್ಚೆ ನಡೆಸುತ್ತಿದ್ದೇನೆ. ಅವರೆಲ್ಲರ ಅನುಮತಿ ಪಡೆದು ಕಾಂಗ್ರೆಸ್ ಸೇರುತ್ತಿರುವುದಾಗಿ ಹೇಳಿದರು.
ಮಂಚನಬೆಲೆ ಜಲಾಶಯದಿಂದ ಬಿಡದಿಯ ನಲ್ಲಿಗುಡ್ಡೆ ಕೆರೆಗೆ ನೀರು ಹರಿಸುವ ಕುಡಿಯುವ ನೀರು ಯೋಜನೆ ಮತ್ತು ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿ ಸಂಬಂಧ 170 ಕೋಟಿ ರೂ.ಗಳ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.