ಮೈಸೂರು: ನಾನು ಸದ್ಯಕ್ಕೆ ರಾಜಕೀಯಕ್ಕೆ ಬರುವುದಿಲ್ಲ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಯದುವೀರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಇಂದು ನಗರದ ಶಿಕ್ಷಕರ ಬಡವಾಣೆಯಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಸಸಿ ನೆಟ್ಟು ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್, ಸದ್ಯ ನಾನು ರಾಜಕೀಯಕ್ಕೆ ಬರುವುದಿಲ್ಲ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದೆ. ನನಗೆ ಈಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇಲ್ಲ. ಮುಂದೆ ಏನಾಗತ್ತೋ ನನಗೆ ಗೊತ್ತಿಲ್ಲ. ಆ ಕಾಲಕ್ಕೆ ತಕ್ಕಂತೆ ನಾವು ಬದಲಾಗಬೇಕಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ದೇಗುಲದಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಿದರೆ ತುಂಬಾನೇ ಒಳ್ಳೆಯದು. ಪ್ಲಾಸ್ಟಿಕ್ ನಿಂದ ದೇಗುಲಕ್ಕೆ ಯಾವುದೇ ರೀತಿಯ ಪ್ರಯೋಜನ ಇಲ್ಲ. ದೇಗುಲ ಪ್ಲಾಸ್ಟಿಕ್ ಮುಕ್ತವಾಗಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಸಮಾಜಕ್ಕೆ ಒಳಿತಾಗುವ ಯಾವುದೇ ಕಾರ್ಯಕ್ರಮ ಇರಲಿ, ಅದಕ್ಕೆ ನಮ್ಮ ಮನೆತನದಿಂದ ಸಹಾಯ-ಸಹಕಾರ ಮಾಡುತ್ತೇವೆ. ಸ್ವಚ್ಛ ಭಾರತದ ಯೋಜನೆಯಲ್ಲಿ ಗಿಡ ನೆಡುವುದನ್ನು ಬಳಸಿಕೊಳ್ಳಬೇಕಿದೆ ಎಂದು ಸಾರ್ವಜನಿಕರಿಗೆ ಕಿವಿಮಾತನ್ನು ಹೇಳಿದರು.