ಮೈಸೂರು: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡ ಆರೋಪದ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ತೆರವು ಮಾಡಲು ನಗರ ಪಾಲಿಕೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಒತ್ತುವರಿದಾರ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮವಾಡಿದ ಘಟನೆ ಇಂದು(ಶುಕ್ರವಾರ) ಮೈಸೂರಿನಲ್ಲಿ ನಡೆದಿದೆ.
ನಗರದ ಅಗ್ರಹಾರದ ಉತ್ತರಾಧಿಮಠದ ಬಳಿ , ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು, ಆ ಸ್ಥಳದಲ್ಲಿ ವಾಹನ ಪಾರ್ಕಿಂಗ್ ವಸೂಲಿ ಆರೋಪ ಕೇಳಿ ಬಂದಿದ್ದರಿಂದ, ತೆರವಿಗಾಗಿ ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹೋದಾಗ ಒತ್ತುವರಿದಾರ ಮಹೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ, ಆತಂಕದೊಂದಿಗೆ ಅವಾಂತರ ಸೃಷ್ಠಿಮಾಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೇಯರ್ ಬಿ.ಎಲ್.ಭೈರಪ್ಪ ಪರಿಶೀಲನೆ ನಡೆಸಿ, ಸ್ಥಳವನ್ನು ನಗರ ಪಾಲಿಕೆಗೆ ತೆಗೆದುಕೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹೇಶ್ಅನ್ನು ವಶಕ್ಕೆ ಪಡೆದಿರುವ ಕೆ.ಆರ್. ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.