ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಸಾಂಕ್ರಾಮಿಕ ರೋಗಗಳ ಭಯವೂ ಹೆಚ್ಚಾಗಿದ್ದು, ಸದ್ಯ 242 ಡೆಂಗ್ಯೂ ಪ್ರಕರಣಗಳು ಬೆಳಕಿಗೆ ಬಂದಿವೆ.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಿದಂಬರ್.ಎಸ್ ಮಾಹಿತಿ ನೀಡಿದ್ದು, 2017ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ಕಂಡುಬಂದಿಲ್ಲ. ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ 2000 ಸ್ಯಾಂಪಲ್ ಪ್ರಕರಣಗಳನ್ನು ಸಂಗ್ರಹಿಸಲಾಗಿದ್ದು, ಖಾಸಗಿ ವಿಭಾಗದಲ್ಲಿ 81 ಸ್ಯಾಂಪಲ್ಗಳನ್ನು ಸಂಗ್ರಹಿಸಲಾಗಿದೆ.
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಿಂದ ಯಾವುದೇ ಸಾವು ಆಗಿಲ್ಲ. ರಾಷ್ಟ್ರೀಯ ರೋಗವಾಹಕ ಹರಡುವ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಮೈಸೂರಿನ ಗ್ರಾಮೀಣ ಪ್ರದೇಶದಲ್ಲಿ 258 ಡೆಂಗ್ಯೂ ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 23 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಈ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುನ್ ಗುನ್ಯಾ, ಮಲೇರಿಯಾಗಳು ಕಂಡು ಬಂದರೆ ಸಂಬಂಧಪಟ್ಟ ವ್ಯಾಪ್ತಿಯ ವೈದ್ಯರಿಗೆ ಪಿ.ಡಿ.ಒಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಬೇಕು. ಮನೆಗಳಲ್ಲಿ ಸೊಳ್ಳೆಗಳು ಕಚ್ಚದಂತೆ ಸೊಳ್ಳೆ ಪರದೆ, ವಾಲ್ಸ್ಪ್ರೇ ಮೊದಲಾದ ಸೊಳ್ಳೆಗಳಿಂದ ರಕ್ಷಿಸಿಕೊಳ್ಳುವ ಮಾರ್ಗಗಳನ್ನು ಸಾರ್ವಜನಿಕರಿಗೆ ತಿಳಿಸುವ ಕಾರ್ಯಕ್ರಮಗಳನ್ನು ನಡೆಸಬೇಕು. ಕೃಷಿ ಹೊಂಡಗಳಲ್ಲಿ, ಕ್ವಾರೆಗಳಲ್ಲಿನ ಗುಂಡಿಗಳಲ್ಲಿ ಈಡಿಸ್ ಸೊಳ್ಳೆಗಳನ್ನು ಆಹಾರವಾಗಿ ಸೇವಿಸುವ ಮೀನುಗಳನ್ನು ನೀಡುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೈಸೂರಿನ ನಗರದಲ್ಲಿ 781 ಡೆಂಗ್ಯೂ ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 76 ಕೇಸ್ಗಳು ಪಾಸಿಟಿವ್ ಬಂದಿವೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 2636 ಡೆಂಗ್ಯೂ ಸ್ಯಾಂಪಲ್ಗಳಲ್ಲಿ 242 ಕೇಸ್ಗಳು ಪಾಸಿಟಿವ್ ಬಂದಿದ್ದು, ಯಾವುದೇ ಸಾವು ಸಂಭವಿಸಿರುವುದಿಲ್ಲ ಎಂದು ಹೇಳಿದ್ದಾರೆ.