ನಂಜನಗೂಡು: ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಸಾರಿಗೆ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ 346 ನಂಬರಿನ ಸಾರಿಗೆ ಬಸ್ ಇದಾಗಿದ್ದು, ಬಸ್ ಚಾಲಕನ ಅತಿ ವೇಗಕ್ಕೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ .
ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಪಲ್ಟಿಯಾಗಿ ಬಿದ್ದಿದೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ತೆರಳುತ್ತಿದ್ದು. ಬಸ್ ಚಾಲಕ ಸೇರಿದಂತೆ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ವರುಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲು ಮಾಡಿಕೊಂಡು ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಿದ್ದಾರೆ.