ನಂಜನಗೂಡು: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಲೈನ್ ಮೆನ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ಗಾಂಧಿ ನಗರದ ನಿವಾಸಿ ಗುರುಮೂರ್ತಿ 35 ಮೃತ ದುರ್ದೈವಿ.
ನಂಜನಗೂಡಿನಿಂದ ಹುರಾ ಗ್ರಾಮಕ್ಕೆ ಲೈನ್ ಮೆನ್ ಗುರುಮೂರ್ತಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಹಲ್ಲರೆ ಗ್ರಾಮದಿಂದ ನಂಜನಗೂಡಿಗೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಸಾರಿಗೆ ಬಸ್ ಚಾಲಕ ಅತಿ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಲೈನ್ ಮೆನ್ ಗುರುಮೂರ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸಾರಿಗೆ ಬಸ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಚಾಲಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅತಿ ವೇಗವಾಗಿ ಸಾರಿಗೆ ಬಸ್ ಚಾಲಕರು ಚಾಲನೆ ಮಾಡಿಕೊಂಡು ಬರುತ್ತಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಅಪಘಾತ ಸಂಭವಿಸಿತ್ತು. ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕುಟುಂಬಕ್ಕೆ ಕೆಲಸ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.