ನಂಜನಗೂಡು: ಹೆಣ್ಣುಮಕ್ಕಳ ಹಕ್ಕು ರಕ್ಷಣೆ ಹಾಗೂ ಅವರ ಮೇಲಿನ ದೌರ್ಜನ್ಯ ತಪ್ಪಿಸಲು ಸರ್ಕಾರ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು, ಇವುಗಳ ಬಗ್ಗೆ ಇನ್ನೂ ಹೆಚ್ಚಿನ ಅರಿವನ್ನು ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಮೂಡಿಸಲಾಗುತ್ತಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಎಸ್. ಭವ್ಯ ಶ್ರೀ ಹೇಳಿದರು.

ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ನಂಜನಗೂಡು ಹಾಗೂ ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ನಂಜನಗೂಡು ಇವರ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಎಸ್ ಭವ್ಯ ಶ್ರೀ ಮಾತನಾಡಿದರು.

ಅನಕ್ಷರಸ್ಥರು ತಮ್ಮ ಜವಾಬ್ದಾರಿ ಕಳೆದುಕೊಳ್ಳಲು ಹಾಗೂ ಬಡತನ ಕಾರಣಗಳಿಂದ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆ ಮಾಡುವುದರಿಂದ ಹೆಣ್ಣು ಮಕ್ಕಳು ಹಲವಾರು ರೀತಿಯ ತೊಂದರೆಗೊಳಗಾಗುತ್ತಿದ್ದಾರೆ. ಆದ್ದರಿಂದ ಎಲ್ಲರಿಗೂ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ದೇಶದ ಎಲ್ಲ ಕಾನೂನು ಸಂವಿಧಾನ ಅಡಿಯಲ್ಲೇ ಬರುವುದರಿಂದ ಎಲ್ಲರೂ ಇದರ ಬಗ್ಗೆ ಹೆಚ್ಚಿನ ಅರಿವು ಹೊಂದಬೇಕು.

ಬಾಲಕಿಯರು ಗರ್ಭಿಣಿ ಆಗುತ್ತಿರುವುದು ಮತ್ತು ಪ್ರಾಣ ಕಳೆದುಕೊಳ್ಳುತ್ತಿರುವುದು ಇತ್ತೀಚಿಗೆ ಹೆಚ್ಚಾಗಿ ಕಂಡು ಬರುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಅಕ್ರಮ ಚಟುವಟಿಕೆಗಳ ಕಡೆ ಗಮನ ಹರಿಸಬಾರದು. 18 ವರ್ಷದ ಒಳಗಿನವರನ್ನು ನಾವು ಮಕ್ಕಳು ಎಂದು ಪರಿಗಣಿಸುತ್ತೇವೆ. ಮಕ್ಕಳ ಲೈಂಗಿಕ ಚಿತ್ರಗಳನ್ನು, ದೃಶ್ಯಗಳನ್ನು ಇಟ್ಟುಕೊಳ್ಳುವುದು,

ಮಕ್ಕಳನ್ನು ಲೈಂಗಿಕ ದೃಷ್ಟಿಯಿಂದ ನೋಡುವುದು, ಅಶ್ಲೀಲ ಚಿತ್ರಗಳನ್ನು, ವಾಕ್ಯಗಳನ್ನು ಮಕ್ಕಳಿಗೆ ತೋರಿಸುವುದು, ಅವರೊಂದಿಗೆ ಅಶ್ಲೀಲವಾಗಿ ಮಾತನಾಡುವುದು ಅಪರಾಧ ಆಗುತ್ತದೆ. ರಸ್ತೆ ಬದಿಯಲ್ಲಿ ಹೋಗುವ ಸಂದರ್ಭದಲ್ಲಿ ಯಾರಾದರೂ ಯಾವುದೇ ವ್ಯಕ್ತಿ ರೇಗಿಸುವುದು, ಕಾಟ ಕೊಡುವುದು, ಹಿಂದೆ ಸುತ್ತಾಡುವುದು ಕಂಡುಬಂದಲ್ಲಿ ಪೋಷಕರಿಗೆ ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ತಕ್ಷಣ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ನಂತರ ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಸಿ.ಎಂ ಸುಗಂಧರಾಜು ಮಾತನಾಡಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ನಂಜನಗೂಡು ತಾಲ್ಲೂಕಿನ ಎಲ್ಲಾ ಪ್ರೌಢಶಾಲೆ ಮತ್ತು ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮೊಬೈಲ್ ಗಳಿಂದಲೇ ಇಂದು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಮೊಬೈಲ್ ಎಂಬುದು ಒಂದು ದೊಡ್ಡ ಮಾಯಾಜಾಲ.

ಅದರ ಗೀಳಗೆ ಬೀಳದೆ ಮೊಬೈಲನ್ನು ಜ್ಞಾನಕ್ಕಾಗಿ ಮಾತ್ರ ಬಳಸಬೇಕು. ಮೊಬೈಲನ್ನು ಹೆಚ್ಚಾಗಿ ಬಳಸುವುದರಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತದೆ. ಮೊಬೈಲನ್ನು ಕೈ ಬಿಟ್ಟು ಪುಸ್ತಕವನ್ನು ವಿದ್ಯಾರ್ಥಿಗಳು ಹೆಚ್ಚು ಓದಿದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬರಲು ಸಾಧ್ಯವಾಗುತ್ತದೆ. ಬೇಡವಾದ ವಿಷಯಗಳಿಗೆ ಗಮನ ಕೊಡದೆ ತಂದೆ-ತಾಯಿಗಳ ಕಷ್ಟಗಳ ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಇರಬೇಕು ಎಂದು ತಿಳಿಸಿದರು.

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲದಾದ ಚಂದ್ರಶೇಖರ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಎಸ್. ಭವ್ಯ ಶ್ರೀ, ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಬಾಬು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರ್, ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶಿವಕುಮಾರ್, ಟ್ರಸ್ಟ್ ನಿರ್ದೇಶಕ ಹಾಗೂ ಕವಲಂದೆ ಗ್ರಾ.ಪಂ ಉಪಾಧ್ಯಕ್ಷ ಸಿ. ಮಂಜುನಾಥ್, ಪತ್ರಕರ್ತರಾದ ವೆಂಕಟೇಶ್, ಕುಮಾರ್, ಉಪನ್ಯಾಸಕರಾದ ಎಂ.ಎನ್ ಮಹದೇವಯ್ಯ, ನಾರಾಯಣಸ್ವಾಮಿ, ರಾಘವೇಂದ್ರ, ಶಿವಕುಮಾರ್, ಚಿನ್ನಸ್ವಾಮಿ, ರಂಜನ, ನಟರಾಜು, ರಾಜಣ್ಣ, ನಂಜುಂಡಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.