ಮೈಸೂರು: ಚುನಾವಣೆ ಭರವಸೆಗಳನ್ನು ಈಗಲೇ ಈಡೇರಿಸಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜಕೀಯ ಪ್ರಜ್ಞೆ ಇಲ್ಲವೇ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಭವನಕ್ಕೆ ಮಂಗಳವಾರ ಆಗಮಿಸಿದ ಅವರು ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದ ಸಾಂಪ್ರದಾಯಿಕ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾವಣಾ ವರ್ಷದಲ್ಲಿ ಮಂಡಿಸಿದ ಬಜೆಟ್ ಅವಧಿ ೩ ತಿಂಗಳು ಮಾತ್ರ. ಬಜೆಟ್ ಮಂಡಿಸದೇ ಕಾರ್ಯಕ್ರಮಗಳಿಗೆ ಹಣ ಕೊಡಲು ಸಾಧ್ಯವಿಲ್ಲ. ಸರ್ಕಾರ ಹಣ ಕೊಡಲು ಏನು ಮಾಡಬೇಕೆಂದು ತಿಳಿಯದೇ ಪೆದ್ದರಂತೆ ಮಾತಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
2014ರಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ರೈತರ ಆದಾಯ ದ್ವಿಗುಣ ಮಾಡಿದರೆ? ಅವರು ನೀಡಿದ ಭರವಸೆಗಳನ್ನು ಈಡೇರಿಸದೇ ತಮ್ಮ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕಾಂಗ್ರೆಸ್ ವಿರುದ್ಧ ಜನರನ್ನು ಎತ್ತಿಕಟ್ಟಲು ಹಸಿಸುಳ್ಳು ಹೇಳುತ್ತಿದ್ದಾರೆ ಎಂದು ನುಡಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಚಿಂತಿತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ನಿದ್ರೆ ಬರುತ್ತಿಲ್ಲ. ದುರಾಡಳಿತ, ಆಡಳಿತ ವಿರೋಧಿ ಧೋರಣೆಯಿಂದ ಜನರು ಮುಖಕ್ಕೆ ಮಸಿ ಬಳಿದಿದ್ದರೆ. ಆದರೆ, ನಮ್ಮ ಘೋಷಣೆ ಯಾವಾಗ ಜಾರಿ ಮಾಡುತ್ತೀರಿ ಎಂದು ಆಗ್ರಹಿಸುತ್ತಿದ್ದಾರೆ. ಭರವಸೆಯನ್ನು ಅನುಷ್ಠಾನಕ್ಕೆ ತರದವರಿಂದ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಸೋತು ಸುಣ್ಣವಾಗಿ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
5ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಔಪಚಾರಿಕ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಗುರುವಾರ ಅಜೆಂಡಾದ ಮೇಲೆ ಸಂಪುಟ ಸಭೆ ಕರೆದಿದ್ದಾರೆ. ಸಭೆಯ ಬಳಿಕ ಎಲ್ಲ ತೀರ್ಮಾನವಾಗಲಿದೆ ಎಂದರು.
ಕಾಂಗ್ರೆಸ್ ಯಾವತ್ತೂ ನುಡಿದಂತೆ ನಡೆದ ಪಕ್ಷವಾಗಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು. 2023ರ ಚುನಾವಣೆಯಲ್ಲಿ ದಲಿತ ಸಂಘಟನೆಗಳು, ಮಹಿಳೆಯರು, ಅಲ್ಪಸಂಖ್ಯಾತರು, ಪ್ರಗತಿಪರರು, ಚಿಂತಕರು, ಸಾಹಿತಿಗಳು ಸಂವಿಧಾನ ಬಲಪಡಿಸುವಂತೆ ಅಧಿಕಾರ ಕೊಟ್ಟರು. ಒಕ್ಕಲಿಗ, ಲಿಂಗಾಯತ ಬೆಂಬಲದಿಂದ ಕಾಂಗ್ರೆಸ್ಗೆ 135 ಸ್ಥಾನಗಳು ದೊರೆತವು ಎಂದು ಹೇಳಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಶಾಸಕ ಕೆ.ಹರೀಶ್ ಗೌಡ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ, ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ನರೇಂದ್ರ, ಎಂ.ಶಿವಣ್ಣ, ಮಂಜುನಾಥ್, ಶಿವಮಲ್ಲು, ಎಚ್.ಎ.ವೆಂಕಟೇಶ್, ಪುಷ್ಪಲತಾ ಚಿಕ್ಕಣ್ಣ, ಈಶ್ವರ್ ಚಕ್ಕಡಿ ಇದ್ದರು.