ಮಹದೇಶ್ವರ ಬೆಟ್ಟ: ಇಲ್ಲಿನ ಬಸ್ ನಿಲ್ದಾಣದ ಬಳಿ ಕೆಎಸ್ಆರ್ಟಿಸ್ ಬಸ್ ಹಾಗೂ ಬೈಕ್ ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗುಂಡ್ಲುಪೇಟೆ ತಾಲ್ಲೂಕಿನ ಕಮರಹಳ್ಳಿಯ ನಾಗರಾಜು ಎಂಬುವರ ಮಗ ಕೀರ್ತನ್ (20) ಮೃತಪಟ್ಟ ಯುವಕ. ಈತನ ಚಿಕ್ಕಪ್ಪನ ಮಗ ಮಾದೇಶ್ (13) ತೀವ್ರವಾಗಿ ಗಾಯಗೊಂಡಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೀರ್ತನ್, ಮಾದೇಶ್ ಬುಲೆಟ್ನಲ್ಲಿ ಸೋಮವಾರ ರಾತ್ರಿಯೇ ಬೆಟ್ಟಕ್ಕೆ ಬಂದು ತಂಗಿದ್ದರು. ಮಂಗಳವಾರ ಬೆಳಿಗ್ಗೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಊರಿಗೆ ಹೊರಟ ಸಂದರ್ಭದಲ್ಲಿ ಅಪಘಾತ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಪ್ರವೇಶ ಮಾಡುವ ಸಂದರ್ಭದಲ್ಲಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿದ್ದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಇಬ್ಬರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದಾರಿ ಮಧ್ಯೆ ಕೀರ್ತನ್ ಕೊನೆಯುಸಿರೆಳೆದ. ಮಾದೇಶ್ನನ್ನು ಮೈಸೂರಿಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಟ್ಟದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.