ಚಾಮರಾಜನಗರ: ಈಗಾಗಲೇ ಎರಡು ಹುಲಿ ಸಂರಕ್ಷಿತ ಪ್ರದೇಶ ಹೊಂದಿರುವ ಚಾಮರಾಜನಗರ ಜಿಲ್ಲೆಗೆ ಮತ್ತೊಂದು ಹುಲಿ ಸಂರಕ್ಷಿತ ಪ್ರದೇಶ ಸೇರ್ಪಡೆಯಾಗುವ ಲಕ್ಷಣಗಳಿದ್ದು, ಸದ್ಯದಲ್ಲೇ ಕೇಂದ್ರದಿಂದ ಆದೇಶ ಹೊರಡಲಿದೆ ಎಂದು ಅರಣ್ಯ ಪರಿಸರ ಹಾಗೂ ಗ್ರಾಹಕರ ಕಲ್ಯಾಣ ಸಚಿವ ಉಮೇಶ್ ಕತ್ತಿ ಹೇಳಿದರು.
ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿಯಲ್ಲಿನ ಜಂಗಲ್ ಲಾಡ್ಜ್ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅರಣ್ಯ ಸಚಿವ ಉಮೇಶ್ ಕತ್ತಿ, ಈಗಾಗಲೇ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಜೀವಿ ಧಾಮವನ್ನು ಸೂಕ್ಷ್ಮ ವಲಯ ಎಂದು ಘೋಷಣೆಯಾಗಿದೆ.
ಇಲ್ಲಿ ಹುಲಿಗಳು ವಾಸ ಮಾಡುವ ಸಂಖ್ಯೆ ಹೆಚ್ಚಾಗುತ್ತಿದ್ದು, ಸಮೃದ್ಧವಾದ ಅರಣ್ಯ ಸಂಪತ್ತು ಹೊಂದಿದ್ದು, ಈ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ಶಿಫಾರಸ್ಸು ಮಾಡಲಾಗಿತ್ತು. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಅದು ಘೋಷಣೆಯಾಗಿಲ್ಲ. ಸದ್ಯದಲ್ಲೇ ಮಲೆ ಮಹದೇಶ್ವರ ವನ್ಯ ಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗುವುದು ಎಂದರು.