ಚಾಮರಾಜನಗರ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿಪಡಿಸಲಾದ ಅನುದಾನಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿರುವ ಸಮಿತಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಡಿ ಅನುದಾನ ಹಂಚಿಕೆಗೆ ಸಂಬಂಧಿಸಿದ ಕ್ರಿಯಾ ಯೋಜನೆ ಕುರಿತ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಗರೋತ್ಥಾನ ಯೋಜನೆಯಡಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್ ದೀಪ, ಸೇರಿದಂತೆ ಇತರೆ ಮೂಲ ಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಂಡು ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸುವಂತೆ ತಿಳಿಸಿದ್ದಾರೆ.
ಈ ಯೋಜನೆಯಡಿ ಗುಣಮಟ್ಟದ ಕೆಲಸಗಳನ್ನು ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ಜನರ ಅಗತ್ಯಕ್ಕೆ ಅನುಗುಣವಾಗಿ ಯೋಜನೆಯಡಿ ಕಾಮಗಾರಿ ನಿರ್ವಹಿಸಿ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕೆಂದು ಸಚಿವರು ಸೂಚಿಸಿದ್ದಾರೆ. ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಹನೂರು, ಯಳಂದೂರಿನ ಪಟ್ಟಣ ಪಂಚಾಯಿತಿಗೆ ನಗರೋತ್ಥಾನದಡಿ ಕಾಮಗಾರಿ ನಿರ್ವಹಿಸಲು ಅನುದಾನ ಹಂಚಿಕೆ ಸಂಬಂಧ ವಿವರವಾಗಿ ಸಮಾಲೋಚಿಸಿದ ಸಚಿವರು ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಪ್ರದೇಶಗಳ ಅಭಿವೃದ್ದಿಯು ಆಗಬೇಕು. ಕೊಳಚೆ ಪ್ರದೇಶಗಳಿಗೂ ಸಹ ಅವಶ್ಯಕ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿಗೆ ನೆರವಾಗಬೇಕೆಂದು ಹೇಳಿದ್ದಾರೆ.
ಸಕಾಲ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳ ಕುರಿತು ಪರಾಮರ್ಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು ನಿಯಮಾನುಸಾರ ಅರ್ಜಿಗಳ ವಿಲೇವಾರಿಯಾಗಬೇಕು. ಇನ್ನೂ ಮೂರು ದಿನಗಳೊಳಗೆ ಬಾಕಿ ಇರುವ ಅರ್ಜಿಗಳ ಬಗ್ಗೆ ತುರ್ತು ಗಮನಹರಿಸಿ ವಿಲೇವಾರಿ ಮಾಡಬೇಕು. ಈ ಕುರಿತ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ್ಕುಮಾರ್, ಚಾಮರಾಜನಗರ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾದ ಸುಶೀಲ, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಆರ್. ಗಿರೀಶ್, ಯಳಂದೂರು ಪಟ್ಣಣ ಪಂಚಾಯಿತಿ ಅಧ್ಯಕ್ಷರಾದ ಆರ್.ಪ್ರಭಾವತಿ, ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಚಂದ್ರಮ್ಮ, ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.