ಚಾಮರಾಜನಗರ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿರುವ ಸಚಿವ ಗೋವಿಂದ ಕಾರಜೋಳ ಅವರಿಗೆ ಸವಾಲ್ ಎಸೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರದ ಮಾರಿಗುಡಿ ಮುಂಭಾಗದ ಮೈದಾನದಲ್ಲಿ ನಡೆದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಮಹತ್ವ ಯೋಜನೆಯಾಗಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನ ತಡೆಗೆ ಪ್ರಯತ್ನಿಸುತ್ತಿರುವ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಕೋರ್ಟ್ ನಿರಾಕರಸಿದೆ.
ಮೇಕೆದಾಟು ಯೋಜನೆ ಸಂಪೂರ್ಣವಾಗಿ ಕುಡಿಯುವ ಯೋಜನೆ ಸಂಬಂಧಿಸಿದ್ದು, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದ ಮಹತ್ವ ಯೋಜನೆಯಾಗಿರುವ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸಚಿವ ಗೋವಿಂದ ಕಾರಜೋಳ ಬಳಿ ಸ್ಫೋಟಕ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.
2018 ರಲ್ಲೇ ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರ ಪರಿಸರ ಸಚಿವಾಲಯ ಅನುಮತಿ ಕೊಟ್ಟರೆ ಸಾಕು. ಆದರೆ, ಮೂರು ವರ್ಷಗಳಾದರೂ ಕೇಂದ್ರ ಅನುಮತಿ ಕೊಟ್ಟಿಲ್ಲ. ಪಕ್ಕದ ತಮಿಳುನಾಡು ಸರ್ಕಾರದ ಮಾತು ಕೇಳಿಕೊಂಡು ಅನುಮತಿ ನೀಡುತ್ತಿಲ್ಲ’ಎಂದು ದೂರಿದರು.
ರಾಜ್ಯದಲ್ಲಿರುವ ಬಿಜೆಪಿ ಮುಖಂಡರು ತಮಿಳುನಾಡಿನವರ ಪರವಾಗಿ ಮಾತನಾಡುತ್ತಿದ್ದಾರೆ. ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಧರಣಿ ಕೂರುತ್ತಾರೆ. ರಾಜ್ಯದ ಬಿಜೆಪಿ ಶಾಸಕ, ಆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ತಮಿಳುನಾಡಿನವರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್ ಧ್ರುವನಾರಾಯಣ್, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ, ಶಾಸಕ ಆರ್ ನರೇಂದ್ರ, ವಿಧಾನ ಪರಿಷತ್ ಸದಸ್ಯ ಡಿ ತಿಮ್ಮಯ್ಯ, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಸ್ ಜಯಣ್ಣ, ಎಸ್ ಬಾಲರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.