ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮೇಲೆ ಚಾಮರಾಜನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅದೇ ರೀತಿ ಮತ್ತೊಂದು ದೂರನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್ನ ಮ್ಯಾಜಿಸ್ಟ್ರೇಟ್ ಡಾ.ಬಿ.ಆರ್.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ. ಸೋಮಣ್ಣ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುದೀಪ್ ಮತ್ತು ನಟರಾಜು ಎಂಬ ಹೆಸರುಗಳೂ ಕೇಳಿಬಂದಿದ್ದು, ಆ ಎರಡು ಹೆಸರುಗಳನ್ನೂ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ದೂರವಾಣಿ ಕರೆ ಮಾಡಿದ್ದ ವಿ. ಸೋಮಣ್ಣ, ನಾಮಪತ್ರ ಹಿಂಪಡೆದರೆ 50 ಲಕ್ಷ ರೂ. ಹಣ ಹಾಗೂ ಗೂಟದ ಕಾರನ್ನು ನೀಡುವ ಆಮಿಷ ಒಡ್ಡಿದ್ದಾರೆ. ಸೋಮಣ್ಣ ಅವರಿಂದ ತಮಗೆ ಕರೆ ಬಂದಿದ್ದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಇದು ಐಪಿಸಿ ಸೆಕ್ಷನ್ ( 171ಸಿ, 171 F) ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸೋಮಣ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.