ಚಾಮರಾಜನಗರ: ಭೀಮನ ಅಮಾವಾಸ್ಯೆಯ ಅಂಗವಾಗಿ ಹನೂರು ತಾಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುರಸ್ಕಾರಗಳು ನಡೆದಿದ್ದು, ಈ ವೇಳೆ ಸಹಸ್ರಾರು ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜಾ ಕೈಂಕರ್ಯಗಳು ನಡೆದವು.
ಭೀಮನಅಮಾವಾಸ್ಯೆ ಹಿನ್ನಲೆಯಲ್ಲಿ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಭಕ್ತರು ಸಂಪ್ರದಾಯದಂತೆ ದೇಗುಲದ ಮುಂಭಾಗ ಧೂಪ ಹಾಕಿ ಅಂತರಗಂಗೆಯ ಬಳಿ ಪುಣ್ಯಸ್ನಾನ ಮಾಡಿದರು. ಬಳಿಕ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರಲ್ಲದೇ, ಆಲಂಬಾಡಿ ಬಸವಮೂರ್ತಿಗೂ ಪೂಜೆ ಸಲ್ಲಿಸಿದರು. ಪ್ರಾಧಿಕಾರದ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನಗಳ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಇನ್ನು ಕೆಲವರು ಮುಡಿಸೇವೆ ನೀಡಿ ಹರಕೆ ತೀರಿಸಿದರು.
ತಮಿಳುನಾಡು ಸೇರಿದಂತೆ ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕನಕಾಪುರ, ಹೆಚ್.ಡಿ. ಕೋಟೆ, ಪಿರಿಯಾಪಟ್ಟಣ, ನಂಜನಗೂಡು, ನರಸೀಪುರ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪ್ರಾಧಿಕಾರದ ವತಿಯಿಂದ ಕುಡಿವ ನೀರಿನ ವ್ಯವಸ್ಥೆ, ವಿಶೇಷ ದಾಸೋಹ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಗೃಹದ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿತ್ತಲ್ಲದೇ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.