ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಭಿವೃದ್ದಿ ಕಾಮಗಾರಿ ಸಂಬಂಧ ಪರಿಶೀಲನೆ ನಡೆಸಿದರು.
ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸಕಲ ಸೌಲಭ್ಯಗಳುಳ್ಳ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ (ಸ್ಟಡಿ ಸೆಂಟರ್) ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ೧೫ ಲಕ್ಷ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅತೀ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಸಂತೇಮರಹಳ್ಳಿ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣ ಕೆಲಸ ವೀಕ್ಷಿಸಿ ತ್ವರಿತವಾಗಿ ಕಾಮಗಾರಿ ಪೂರೈಸುವಂತೆ ನಿರ್ದೇಶನ ನೀಡಿದರು.
ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಯವರು ಮಳೆ ನೀರು ನಿಲ್ಲದೆ ಸರಾಗವಾಗಿ ಚರಂಡಿಗೆ ಹರಿಯಲು ಪೂರಕವಾಗಿರುವ ಕಾಮಗಾರಿಗೆ ಸೂಕ್ತ ಪ್ರಸ್ತಾವನೆಯನ್ನು ತಕ್ಷಣವೇ ಸಿದ್ದಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದೊಡ್ಡರಸನ ಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೋರಿಕೆ ತಡೆಯುವುದು ಸೇರಿದಂತೆ ಕೊಳದ ಸಮಗ್ರ ಅಬಿವೃದ್ದಿ ಕಾರ್ಯಕ್ಕಾಗಿ ಅಂದಾಜು ಪಟ್ಟಿ ಸಿದ್ದಪಡಿಸುವಂತೆ ನಿರ್ದೇಶನ ನೀಡಿದರಲ್ಲದೆ, ತರಕಾರಿ ಮಾರುಕಟ್ಟೆ ಸ್ಥಳಕ್ಕೆ ಭೇಟಿ ಕೊಟ್ಟು ಅದರ ನವೀಕರಣ ಸಂಬಂಧ ಪರಿಶೀಲನೆ ನಡೆಸಿದರು. ಇತರೆ ಭಾಗಗಳಿಗೂ ಭೇಟಿ ನೀಡಿ ನೀರು ನಿಲ್ಲದಂತೆ ವಹಿಸಬೇಕಿರುವ ಕ್ರಮಗಳಿಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ಧೇಶಕರಾದ ಎಂ.ವಿ. ಸುಧಾ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಇಬ್ರಾಹಿಂ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ನಗರಸಭೆ ಆಯುಕ್ತರಾದ ನಟರಾಜು, ಜಿಲ್ಲಾ ಗ್ರಂಥಾಲಯ ಅಧಿಕಾರಿ ಶಿವಸ್ವಾಮಿ ಸೇರಿದಮತೆ ಇತರೆ ಅಧಿಕಾರಿಗಳು ಇದ್ದರು.