ಚಾಮರಾಜನಗರ: ಜಿಲ್ಲೆಯಲ್ಲಿ ಸತತವಾಗಿ ಸುರಿದಿರುವ ಮಳೆ ಹಾಗೂ ಇದರಿಂದ ಸಂಭವಿಸಿರುವ ಬೆಳೆಹಾನಿ ಬಗ್ಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ರೈತರು, ಬೆಳೆಗಾರರಿಗೆ ಆಗಿರುವ ನಷ್ಟವನ್ನು ಸಮರ್ಪಕವಾಗಿ ನೀಡುವುದು,ಭತ್ತ ಖರೀದಿ ಕೇಂದ್ರ ಆರಂಭ, ಕಬ್ಬಿಗೆ ಸರಿಯಾದ ಬೆಲೆ ನಿಗದಿ ಸೇರಿದಂತೆ ವಿವಿಧ ಸಮಸ್ಯೆಗಳ ಸಂಬಂಧ ರೈತ ಮುಖಂಡರ ಜತೆ ಸಭೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ಪಡೆದುಕೊಂಡಿದ್ದಾರೆ.
ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 22ರಂದು ರೈತರ ಸಮಸ್ಯೆಗಳ ಕುರಿತು ಚರ್ಚೆಗಾಗಿ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ.
ಬಿತ್ತನೆಯಾಗದೇ ರೈತರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಸಮರ್ಪಕವಾಗಿ ಬೆಳೆ ಪರಿಹಾರ ನೀಡಬೇಕಿದೆ ಎಂದು ರೈತ ಮುಖಂಡರಾದ ಹೊನ್ನೂರು ಪ್ರಕಾಶ್ ಅವರು ಜಿಲ್ಲಾಧಿಕಾರಿಗಳ ಗಮನ ಸೆಳೆದರಲ್ಲದೆ, ಕಬ್ಬಿನ ಖರೀದಿಗೆ ಸರಿಯಾದ ಬೆಲೆ ನೀಡಬೇಕು. ಭತ್ತ ಖರೀದಿ ಕೇಂದ್ರವನ್ನು ಮುಂಚಿತವಾಗಿ ಆರಂಭಿಸಬೇಕು. ವಿದ್ಯುತ್ ಬಾಕಿ ಮನ್ನಾ ಸಂಬಂಧ ಪ್ರಸ್ತಾಪಿಸಿದ ರೈತ ಮುಖಂಡರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಬಾಕಿ ಪಾವತಿಸುವಂತೆ ಒತ್ತಾಯ ಮಾಡಲಾಗುತ್ತಿರುವ ಬಗ್ಗೆಯೂ ತಿಳಿಸಿದರು.
ಕಾಡುಪ್ರಾಣಿಗಳಿಂದ ಆಗುತ್ತಿರುವ ಬೆಳೆ ನಷ್ಟವನ್ನು ತಪ್ಪಿಸಬೇಕು. ಅರಣ್ಯ ಇಲಾಖೆ ಕಾಡುಪ್ರಾಣಿಗಳಿಂದ ಉಂಟಾದ ಬೆಳೆಹಾನಿಗೆ ನೀಡುವ ಪರಿಹಾರ ವೈಜ್ಞಾನಿಕವಾಗಿರಬೇಕು. ಪೌತಿ ಖಾತೆ ವಿಳಂಬ ಮಾಡಬಾರದು ಎಂಬುದು ಸೇರಿದಂತೆ ಹಲವಾರು ವಿಷಯಗಳನ್ನು ರೈತ ಮುಖಂಡರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ರೈತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿರುವ ಹಾಗೂ ಚರ್ಚಿಸಲಾಗಿರುವ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವರದಿ ಸಲ್ಲಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಓ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ರೈತ ಮುಖಂಡರಾದ ಡಾ. ಗುರುಪ್ರಸಾದ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಹೆಬ್ಬಸೂರು ಬಸವಣ್ಣ, ಹೊನ್ನೂರು ಬಸವಣ್ಣ, ಶೈಲೇಶ್, ಜ್ಯೋತಿಗೌಡನಪುರದ ಸಿದ್ದರಾಜು, ಇತರೆ ಮುಖಂಡರು, ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್ಕುಮಾರ್, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಜಂಟಿ ಕೃಷಿ ನಿರ್ದೇಶಕರಾದ ಮಧುಸೂಧನ್, ತಹಶೀಲ್ದಾರ್ ಬಸವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.