ಚಾಮರಾಜನಗರ: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲಿ ಪ್ರತಿ ಮನೆಮನೆಯಲ್ಲೂ, ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿದ ಬಳಿಕ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದವರೆಗೆ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯದ ನಡಿಗೆ ಜಾಥಾಗೆ ಹಸಿರು ನಿಶಾನೆ ತೋರಿದರು.
ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಆಕರ್ಷಕ ಜಾಥಾ ಕಾರ್ಯಕ್ರಮದಲ್ಲಿ ಸ್ವತಹ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತ್ರಿವರ್ಣ ಧ್ವಜ ಹಿಡಿದು ಹೆಜ್ಜೆ ಹಾಕಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸಾಥ್ ನೀಡಿದರು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಶಾಲಾಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಅದರಲ್ಲೂ ಶಾಲಾ ವಿದ್ಯಾರ್ಥಿಗಳು 30ಅಡಿ ಉದ್ದದ ತ್ರಿವರ್ಣ ಧ್ವಜ ಹಿಡಿದು ಜಾಥಾದ ಉದ್ದಕ್ಕೂ ಸಾಗಿದ್ದು ನೋಡುಗರ ಗಮನ ಸೆಳೆಯಿತು. ಬೋಲೋ ಭಾರತ್ ಮಾತಾಕೀ ಉದ್ಘೋಷಗಳು ಮುಗಿಲು ಮುಟ್ಟುವಂತಿತ್ತು.
ಜಿಲ್ಲಾಡಳಿತ ಭವನದಿಂದ ಹೊರಟ ಸ್ವಾತಂತ್ರ್ಯ ಅಮೃತ ಮಹೋತ್ಸವದ ಜಾಥಾ ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಚಾಮರಾಜೇಶ್ವರ ದೇವಸ್ಥಾನದವರೆಗೆ ತಲುಪಿ ಮತ್ತೆ ಜಿಲ್ಲಾಡಳಿತ ಭವನಕ್ಕೆ ಹಿಂತಿರುಗಿ ಮುಕ್ತಾಯವಾಯಿತು.
ದೇಶ ಸ್ವಾತಂತ್ರ್ಯಗೊಂಡು 75ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ನಗರದ ವಿವಿಧೆಡೆ ನಡೆಯಿತು.
ಚಾಮರಾಜನಗರ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಜಾಥಾಗೆ ನಗರಸಭೆ ಅಧ್ಯಕ್ಷರಾದ ಆಶಾನಟರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.
ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಿದರು. ಹರ್ ಘರ್ ತಿರಂಗಾ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದಂತೆ ಎಲ್ಲರೂ ಭಾರತ ತ್ರಿವರ್ಣ ಧ್ವಜ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ದೇಶಪ್ರೇಮ ಅಭಿಮಾನ ಮೆರೆದರು. ಇದೇ ವೇಳೆ ನಗರಸಭಾ ಅಧ್ಯಕ್ಷರಾದ ಅಶಾನಟರಾಜು ಅವರು ಪಟ್ಟಣ ವ್ಯಾಪ್ತಿಯಲ್ಲಿ ಉತ್ತಮ ಸ್ವಚ್ಚತಾ ಸೇವಾ ಕಾರ್ಯ ನಿರ್ವಹಿಸಿದ ಪೌರಕಾರ್ಮಿಕರಿಗೆ ಪ್ರಮಾಣಪತ್ರವನ್ನು ವಿತರಿಸಿದರು.
ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ರಾಜು, ಡಿ.ವೈ.ಎಸ್.ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ತ್ರಿವರ್ಣ ಧ್ವಜ ಪ್ರದರ್ಶಿಸಿ ಜಾಥಾಗೆ ಚಾಲನೆ ನೀಡಿದರು.
ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿದ ಜಾಥಾದಲ್ಲಿ ಅರಣ್ಯ, ಅಗ್ನಿಶಾಮಕ, ಅಬಕಾರಿ ಹಾಗೂ ಗೃಹರಕ್ಷಕ ದಳದ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು. ಪೊಲೀಸ್ ಬ್ಯಾಂಡ್ ತಂಡ ಸಹ ಭಾಗವಹಿಸಿತ್ತು. ದೊಡ್ಡಂಗಡಿ ಬೀದಿ, ರಥದಬೀದಿ, ಪಚ್ಚಪ್ಪ ವೃತ್ತದ ಮೂಲಕ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಾಥಾ ಮುಕ್ತಾಯವಾಯಿತು.