ಚಾಮರಾಜನಗರ: ಮತದಾನದ ಮಹತ್ವ ಸಾರುವ ಉದ್ದೇಶದಿಂದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆಯ ವಿದ್ಯಾರ್ಥಿಗಳು, ಬೋಧಕರು, ಪ್ಯಾರಾ ಮೆಡಿಕಲ್, ನರ್ಸಿಂಗ್ ವಿದ್ಯಾರ್ಥಿಗಳು ನಗರದಲ್ಲಿ ಬೃಹತ್ ಜಾಥಾ ನಡೆಸಿ ಗಮನ ಸೆಳೆದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಮತದಾನದ ಪ್ರಾಮುಖ್ಯತೆಯ ಅರಿವು ಮೂಡಿಸಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಬೃಹತ್ ಸಂಖ್ಯೆಯಲ್ಲಿ ಹೊರಟ ಜಾಥಾ ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿತು. ಮುಖ್ಯ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಬಳಿ ವಿದ್ಯಾರ್ಥಿಗಳು ವೃತ್ತಾಕಾರವಾಗಿ ನಿಂತು ಮತದಾನದ ಜಾಗೃತಿ ಘೋಷಣೆಗಳನ್ನು ಮೊಳಗಿಸಿದರು. ಬಳಿಕ ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡ ವಿದ್ಯಾರ್ಥಿಗಳು ಅಲ್ಲಿಯೂ ಅರಿವು ಮೂಡಿಸುವ ಕಾರ್ಯದಲ್ಲಿ ಪಾಲ್ಗೊಂಡರು.
ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮಾತನಾಡಿ ವಿದ್ಯಾರ್ಥಿಗಳಾಗಿರುವ ಯುವ ಮತದಾರರು ಜಾಗೃತಿ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ಸಂತಸದ ಸಂಗತಿಯಾಗಿದೆ. ಭಾರತ ಪ್ರಜಾಪ್ರಭುತ್ವದ ಅತೀ ದೊಡ್ಡ ರಾಷ್ಟ್ರ ಎನಿಸಿಕೊಂಡಿದೆ. ವಿಧಾನಸಭಾ ಚುನಾವಣೆಗೆ ಇದೇ ಮೇ ತಿಂಗಳ ೧೦ರಂದು ಮತದಾನ ನಡೆಯಲಿದೆ. ಪ್ರತಿಯೊಬ್ಬರೂ ಅಂದು ತಮ್ಮ ಅಮೂಲ್ಯವಾದ ಹಕ್ಕನ್ನು ಚಲಾಯಿಸಬೇಕು ಎಂದರು.
ಈ ಬಾರಿಯ ಮುಖ್ಯ ಧ್ಯೇಯ ವಾಕ್ಯ ನಾನು ಖಚಿತವಾಗಿ ಮತದಾನ ಮಾಡುತ್ತೇನೆ, ಮತದಾನಕ್ಕಿಂತ ಬೇರೊಂದಿಲ್ಲ ಎಂಬುದು ಆಗಿದೆ. ಅದರಂತೆ ಎಲ್ಲರೂ ಮತದಾನ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಚಾಮರಾಜನಗರ ವೈದ್ಯಕೀಯ ಕಾಲೇಜಿನ ಬೋಧಕರಾದ ಡಾ. ಅಜಯ್, ಡಾ. ವೇದಶ್ರೀ, ಡಾ. ವಿವೇಕ್, ಡಾ. ಮಾರುತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇತರರು ಇದ್ದರು.