ಚಾಮರಾಜನಗರ: ತುಮಕೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದ ಎದುರು ಚಾಮರಾಜನಗರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ತಮ್ಮ ಬೆಂಬಲಿಗರೊಂದಿಗೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ನೀಡಿದರೆ ಗೌರವವಾಗುತ್ತದೆ ಎಂದರು. ಈ ಘಟನೆ ದುರಂತವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
“ರಾಜ್ಯದ ಆಸ್ಪತ್ರೆಗಳು ಯಾವಾಗಲೂ ಜನರ ಸೇವೆ ಮಾಡಲು ಸಿದ್ಧವಾಗಿರಬೇಕು. ಆಸ್ಪತ್ರೆಗಳು ಜನರಿಗಾಗಿ ಇರಬೇಕು. ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಾನದಂಡವನ್ನು ಸ್ಥಾಪಿಸಬೇಕು. ಆಸ್ಪತ್ರೆಗಳಲ್ಲಿನ ನಿರ್ಲಕ್ಷ್ಯದಿಂದಾಗಿ ಸಾವುಗಳ ಬಗ್ಗೆ ನಾವು ಕೇಳುತ್ತೇವೆ, ಇದು ದುಃಖದ ಸ್ಥಿತಿಯಾಗಿದೆ ಎಂದು ಅವರು ಹೇಳಿದರು.