ಗುಂಡ್ಲುಪೇಟೆ: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಜೆ.ಎನ್ 1 ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮೂಲಹೊಳೆ ಚೆಕ್ ಪೋಸ್ಟ್ ನಲ್ಲಿ ಹಾದು ಹೋಗುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತೀವ್ರ ತಪಾಸಣೆ ನಡೆಸುತಿದ್ದಾರೆ.
ಕೇರಳ ರಾಜ್ಯದಿಂದ ಬರುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ಆರೋಗ್ಯ ಇಲಾಖೆಯ ವತಿಯಿಂದ ಇಬ್ಬರು ಕಮ್ಯೂನಿಟಿ ಆರೋಗ್ಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದ್ದು ಕೇರಳ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಜಾಗೃತಿ ಮೂಡಿಸುವ ಜೊತೆಗೆ ಸ್ಕೀನಿಂಗ್ ನಡೆಸಲಾಗುತ್ತಿದೆ, ನಮ್ಮ ರಾಜ್ಯದವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ.
ಕೇರಳದಿಂದ ಬರುವ ಶಬರಿಮಲೆ ಯಾತ್ರೆ ಮುಗಿಸಿ ಮೂಲೆಹೊಳೆ ಚೆಕ್ ಪೋಸ್ಟ್ ಮುಖಾಂತರ ಬರುವ ಜನರ ದಾಖಲಾತಿಯನ್ನು ಆರೋಗ್ಯ ಇಲಾಖೆ ಪರಿಶೀಲಿಸುತಿದ್ದು , ಜನರು ತೆರಳುವ ಆಯಾಯಾ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇವರ ಮಾಹಿತಿಯನ್ನು ಕಳುಹಿಸಲಾಗುತ್ತಿದೆ ಅಲ್ಲಿನ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಹೊರಗಿನಿಂದ ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಸೂಚಿಸಿದೆ.
ಕೋವಿಡ್ ಸೋಂಕು ಕಂಡುಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲು ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 5 ಬೆಡ್ ಗಳ ವಾರ್ಡ್ ಸಿದ್ದಪಡಿಸಲಾಗಿದೆ.